55
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಶಾಂಭವಿ ಶಾಲೆ ಎದುರು ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಗಿಳಿಯಾರಿನ ಕೃಷ್ಣ ದೇವಾಡಿಗ (60) ಎಂದು ಗುರುತಿಸಲಾಗಿದ್ದು, ಅವರು ವೃತ್ತಿಯಲ್ಲಿ ಟಿಪ್ಪರ್ ಲೋಡರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಮರಳಲು ಅವರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ವೇಳೆ, ಸಾಲಿಗ್ರಾಮ ಕಡೆಯಿಂದ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರು ಅವರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆ ಮತ್ತು ಕಾಲಿಗೆ ಗಂಭೀರ ಗಾಯಗೊಂಡಿದ್ದ ಕೃಷ್ಣ ಅವರನ್ನು ಸ್ಥಳೀಯರಾದ ನಾಗರಾಜ್ ಪುತ್ರನ್ ಹಾಗೂ ಕಿಶೋರ್ ಶೆಟ್ಟಿ ಅವರು ತಕ್ಷಣವೇ ಆಂಬುಲೆನ್ಸ್ ಮೂಲಕ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕೋಟ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

