Home » ಮಾದಕ ವಸ್ತು ಮಾರಾಟ ಜಾಲ : ಮೂವರು ಆರೋಪಿಗಳ ಬಂಧನ
 

ಮಾದಕ ವಸ್ತು ಮಾರಾಟ ಜಾಲ : ಮೂವರು ಆರೋಪಿಗಳ ಬಂಧನ

by Kundapur Xpress
Spread the love

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರಿಂದ 53.58 ಗ್ರಾಂ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತು, ಒಂದು ಕಾರು, ಮೊಬೈಲ್ ಫೋನ್‌ಗಳು, ರೂ.10,000 ನಗದು ಹಾಗೂ ತಲವಾರ್ ವಶಪಡಿಸಿಕೊಳ್ಳಲಾಗಿದೆ.

ಫೆಬ್ರವರಿ 18ರಂದು ಆರೋಪಿಗಳು ಪುತ್ತೂರಿನಿಂದ ಸುಳ್ಯ ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ತಕ್ಷಣ ಕಾರ್ಯಾಚರಣೆ ಕೈಗೊಂಡ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 53.58 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕವಸ್ತುವಿನ ಅಂದಾಜು ಮಾರುಕಟ್ಟೆ ಮೌಲ್ಯ ರೂ.5,38,800 ಎಂದು ತಿಳಿದುಬಂದಿದೆ.

ಬಂಧಿತರನ್ನು ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30), ಕೋಝಿಕೋಡ್, ಕೇರಳ; ಇಸ್ಮಾಯಿಲ್ (28), ವಯನಾಡ್ ಜಿಲ್ಲೆ, ಕೇರಳ; ಸಂಶೀರ್ (27), ಕೋಝಿಕೋಡ್, ಕೇರಳ ಎಂದು ಗುರುತಿಸಲಾಗಿದೆ.ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೇರಳ, ಗೋವಾ ಹಾಗೂ ಕರ್ನಾಟಕದ ವಿವಿಧ ಭಾಗಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಮುಖ್ಯ ಆರೋಪಿ ಮುಹಮ್ಮದ್ ಅಜ್ಮಲ್ ವಿರುದ್ಧ ಈಗಾಗಲೇ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಇತರ ಆರೋಪಿಗಳ ಮೇಲೂ ಕೇರಳದ ವಿವಿಧ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ಉಪವಿಭಾಗದ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆಯ ಪ್ರಭಾರ ನಿರೀಕ್ಷಕ ಸುನಿಲ್ ಕುಮಾರ್, ಡಿಎಸ್‌ಬಿ ವಿಭಾಗದ ನಂದ ಕುಮಾರ್, ಉಪನಿರೀಕ್ಷಕರಾದ ಗುಣಪಾಲ ಹಾಗೂ ಸುಶ್ಮಾ ಜೆ. ಭಂಡಾರಿ ನೇತೃತ್ವದ ತಂಡ ದಾಳಿ ನಡೆಸಿತು. ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್, ಪ್ರಶಾಂತ್ ರೈ, ಹರ್ಷಿತ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಬಂಧಿತ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಮತ್ತು ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Related Articles

error: Content is protected !!