ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ಎದ್ದಿರುವ ಭಿನ್ನಮತ, ಎಲ್ಲ ವಿವಾದಗಳಿಗೂ ಇತಿಶ್ರೀ ಹಾಕುವ ಕಾಲ ಕೂಡಿ ಬಂದಿದೆ ಸದ್ಯದಲ್ಲೇ ರಾಜ್ಯಾಧ್ಯಕ್ಷರು ಯಾರಾಗುತ್ತಾರೆ ಅನ್ನೋದು ಗೊತ್ತಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಕಾಪುವಿನ ಹೊಸಮಾರಿಗುಡಿಯ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಸ್ತುತ ದೇಶದ 12 ರಾಜ್ಯಗಳಲ್ಲಿ ಮಾತ್ರ ಬಿಜೆಪಿ ಅಧ್ಯಕ್ಷರ ನೇಮಕಾತಿಯಾಗಿದೆ. ನಮ್ಮ ರಾಜ್ಯ ಒಳಗೊಂಡಂತೆ ಇತರ ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆ ಕೆಲವೇ ದಿನಗಳಲ್ಲಿ ಆಗಲಿದೆ. ನಮ್ಮ ರಾಜ್ಯದ ಸಮಸ್ಯೆ ವಿಶೇಷವಾಗಿದೆ. ಅಧ್ಯಕ್ಷ ಹೆಸರು ಘೋಷಣೆಯಾಗುತ್ತಿದ್ದಂತೆ ಎಲ್ಲ ಸಮಸ್ಯೆ ಬಗೆಹರಿಯಲಿದೆ ಎಂದರು.
ಏನೇ ಸಮಸ್ಯೆಗಳು ಬಂದರೂ ನಾನು ನಿರಾಳವಾಗಿರುತ್ತೇನೆ. ಈ ಸಮಸ್ಯೆಗೆ ಉತ್ತರ ಏನು ಅನ್ನೋದು ನನಗೆ ಗೊತ್ತಿದೆ. ಕೇಂದ್ರದ ವರಿಷ್ಠರಿಗೂ ಗೊತ್ತಿದೆ, ರಾಜ್ಯದಲ್ಲಿ ಒಳ್ಳೆ ರಾಜ್ಯಾಧ್ಯಕ್ಷರ ಆಯ್ಕೆಯಾಗುತ್ತದೆ. ಆ ಮೂಲಕ ಎಲ್ಲ ಸಮಸ್ಯೆಗಳಿಗೂ ಕೇಂದ್ರದ ವರಿಷ್ಠರು ಒಳ್ಳೆಯ ಉತ್ತರ ನೀಡುತ್ತಾರೆ ಎಂದು ಹೇಳಿದರು
ಬಿಜೆಪಿ ನಾಯಕರ ಸಭೆ :
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಲು ಭಾನುವಾರ ಸಂಜೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಪು ಕಡಲ ತೀರದಲ್ಲಿ ಪಕ್ಷದ ನಾಯಕರ ಜೊತೆ ಸಭೆ ನಡೆಸಿದರು.
ಕಡಲ ತೀರದಲ್ಲಿ ವಿಹಾರ ವಿಹಾರ ನಡೆಸಿ, ಅಲ್ಲಿಯೇ ಸ್ವಲ್ಪ ಹೊತ್ತು ಕುಳಿತು, ಜಿಲ್ಲೆಯ ಬಿಜೆಪಿ ಶಾಸಕರಾದ ಯಶ್ಚಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜಾ, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಜಿಲ್ಲಾಧ್ಯಕ್ಷ ಕಿಶೋರ್ಕುಮಾರ್ ಜೊತೆ ಮಾತುಕತೆ ನಡೆಸಿದರು

