ಮಂಗಳೂರು : ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ವಿರುದ್ಧದ ಎರಡು ಪ್ರಕರಣಗಳಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಹಾರದ ಉದ್ಯಮಿಗೆ ಹತ್ತು ಕೋಟಿ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ಪೊಲೀಸರ ತನಿಖಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ.
ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜಪ್ಪಿನಮೊಗರಿನಲ್ಲಿ ರೋಶನ್ ಸಲ್ದಾನ ಎಂಬಾತನನ್ನು ಸಿಇಎನ್ ಪೊಲೀಸರು ಇತ್ತೀಚೆಗೆ ಬಂಸಿದ್ದರು. ಆತನ ಬಂಧನ ವಿಚಾರ ದೇಶಾದ್ಯಂತ ಸುದ್ದಿಯಾಗುತ್ತಿದ್ದಂತೆ ಹಲವಾರು ಉದ್ಯಮಿಗಳು ತಮಗೆ ವಂಚನೆ ನಡೆಸಿರುವ ಬಗ್ಗೆ ದೂರು ನೀಡಲು ಮುಂದೆ ಬಂದಿದ್ದರು. ಬಿಹಾರ ಮೂಲದ ಉದ್ಯಮಿ ತನ್ನಿಂದ ಹತ್ತು ಕೋಟಿ ವಂಚನೆ ಎಸಗಿದ್ದಾನೆಂದು ದೂರು ನೀಡಿದ್ದರು. ಅಸ್ಸಾಂ ಮತ್ತು ಮಹಾರಾಷ್ಟ್ರ ಮೂಲದ ವ್ಯಕ್ತಿಗಳೂ 5 ಕೋಟಿಯಂತೆ ವಂಚನೆ ಎಸಗಿದ್ದಾಗಿ ದೂರು ನೀಡಿದ್ದರು.
ಅದಕ್ಕೂ ಮೊದಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಒಂದೂವರೆ ಕೋಟಿ ವಂಚಿಸಿದ್ದ ಬಗ್ಗೆ ದೂರು ನೀಡಿದ್ದರು. ಮಂಗಳೂರಿನಲ್ಲಿ ದಾಖಲಾದ ಎರಡು ದೂರನ್ನು ಆಧರಿಸಿ ಪೊಲೀಸರು ಆರೋಪಿ ರೋಶನ್ ಸಲ್ದಾನ ವಿರುದ್ಧ ಕಾರ್ಯಾಚರಣೆ ನಡೆಸಿ ಆತನ ಮನೆಯಲ್ಲೇ ಪೊಲೀರು ಬಂಧಿಸಿದ್ದರು.
ಇದೀಗ ಹೈಕೋರ್ಟ್ ಪೊಲೀಸರ ತನಿಖಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ.

