ಕುಂದಾಪುರ : ಕುಂದಾಪುರ ನಗರದ ಸರಕಾರಿ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಹೆರಿಗೆ ವೇಳೆ ಮಗು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು ಮಗುವಿನ ಹೆತ್ತವರು ಬಂಧುಗಳು ಹಾಗೂ ಗ್ರಾಮಸ್ಥರು ಸೋಮವಾರ ಸಂಜೆಯ ವೇಳೆಗೆ ದಿಢೀರ್ ಪ್ರತಿಭಟನೆ ನಡೆಸಿ ಹೆರಿಗೆ ಮಾಡಿಸಿದ ವೈದ್ಯರನ್ನು ತಕ್ಷಣ ಅಮಾನತು ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ
ನ.17 ರಂದು ರಾತ್ರಿ 10.30 ರ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಅವರ ಪತ್ನಿ ಜ್ಯೋತಿ ಎಂಬವರು ಹೆರಿಗೆ ನೋವಿನಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು ಸೋಮವಾರ ಬೆಳಗ್ಗೆ ವೈದ್ಯರು ಸಹಜ ಹೆರಿಗೆ ಮಾಡಿಸಿದಾಗ ಮಗು ಮೃತಪಟ್ಟಿತ್ತು ಮಗುವಿನ ಕುತ್ತಿಗೆಗೆ ಕರಳು ಬಳ್ಳಿ ಸುತ್ತಿಕೊಂಡು ಸಾವು ಸಂಭವಿಸಿದೆ ಎಂದು ಹೆರಿಗೆ ವಿಭಾಗದ ವ್ಯೆದ್ಯರು ತಿಳಿಸಿದ್ದಾರೆ
ಇದು ವೈದ್ಯರ ನಿರ್ಲಕ್ಷ್ಯದಿಂದ ಆದ ಸಾವು ಎಂದು ಆರೋಪಿಸಿ ಊರವರು ಹಾಗೂ ಮನೆಯವರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಘಟನೆಗೆ ಸಂಬಂಧಪಟ್ಟ ವೈದ್ಯರ ಅಮಾನತು ಮಾಡಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಸ್ಥಳಕ್ಕೆ ಡಿಸಿ, ಜಿಲ್ಲಾ ಆರೋಗ್ಯಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಸೋಮವಾರ ಸಂಜೆ ಆಸ್ಪತ್ರೆಯೆದರು ಧರಣಿ ಕೂತರು
ಮಗುವಿನ ಕುತ್ತಿಗೆಗೆ ಹೊಕ್ಕುಳಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ತಿಳಿಸಿದ್ದು ಉಡಾಫೆಯಿಂದ ಮಾತಾಡಿದ್ದಾಗಿ ಕುಟುಂಬಿಕರು ಆರೋಪಿಸಿದ್ದಾರೆ. ರಕ್ತಸ್ರಾವ ಇದೆ, ಹೊಟ್ಟೆ ನೋವು ಇದೆ ಎಂದರೂ ವೈದ್ಯರು ಕ್ಯಾರೇ ಮಾಡಿಲ್ಲ. ಎಂಟೂವರೆ ತಿಂಗಳಿನ ವೇಳೆ ಸ್ಕಾನಿಂಗ್ ಮಾಡದ ಕಾರಣ ಈಗ ಸ್ಕ್ಯಾನಿಂಗ್ ಮಾಡಿ ಎಂದು ಮನೆಯವರು ಒತ್ತಾಯಿಸಿದರೂ ವೈದ್ಯರು ಸ್ಕಾನಿಂಗ್ ಮಾಡಿಸಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ
ಆಸ್ಪತ್ರೆಯ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಸ್ಥಳಕ್ಕೆ ತೆರಳಿ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರೂ ಪ್ರತಿಭಟನಕಾರರು ಸ್ಥಳ ಬಿಟ್ಟು ಕದಲದೆ ಬೆಳಿಗ್ಗೆಯ ವರೆಗೂ ಅಲ್ಲಿಯೇ ಮಲಗಿದ್ದು ಇಂದು ಪ್ರತಿಭಟನೆಯ ಕಾವು ಹೆಚ್ಚಾಗುವ ಸಂಭವವಿದೆ ಎಂದು ತಿಳಿದುಬಂದಿದೆ
ಸ್ಥಳಕ್ಕೆ ಬಂದಿರುವ ಡಿಎಚ್ ಒ, ತಹಶೀಲ್ದಾರ್ ಹಾಗೂ ಸಹಾಯಕ ಕಮೀಷನರ್ ಪ್ರತಿಭಟನಾ ನಿರತರ ಮನವೊಲಿಸಲು ಯತ್ನಿಸಿದ್ದು, ವೈದ್ಯರ ಸಸ್ಪೆಂಡ್ ಮಾಡುವ ತನಕವೂ ಪ್ರತಿಭಟನೆ ಕೈಬಿಡಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಕುಂದಾಪುರ ನಗರ ಠಾಣೆ ಇನ್ಸ್ಪೆಕ್ಟರ್ ನಂದಕುಮಾರ್, ಪಿಎಸ್ಐ ಪ್ರಸಾದ್, ಸಂಚಾರ ಠಾಣೆ ಪಿಎಸ್ಐ ಸುಬ್ಬಣ್ಣ ನೇತೃತ್ವದಲ್ಲಿ ಬಂದೋ ಬಸ್ತ್ ಮಾಡಲಾಗಿದೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಪ್ರತಿಭಟನಾ ನಿರತರ ಅಹವಾಲು ಸ್ವೀಕರಿಸಿದರು

