ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ಮತ್ತು ಇಂಧನ ದರಗಳು ವಿಪರೀತ ಏರದಂತೆ ತಡೆಯಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದಲ್ಲಿ ಭಾರಿ ಕಡಿತವನ್ನು ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆ ಪ್ರಶಂಸನೀಯ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. ದೂರದರ್ಶಿತ್ವದ ಚಿಂತನೆಯಿಂದ ಇಂಧನ ದರ ಇಳಿಕೆ ಮೂಲಕ ಜನ ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಇಂಧನ ಖಾತೆ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಪೆಟ್ರೋಲ್ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ ರೂ.10 ರಷ್ಟು ಕಡಿತಗೊಳಿಸಿ ರೂ.13 ರಿಂದ ರೂ.3ಕ್ಕೆ ಇಳಿಸಲಾಗಿದೆ. ಡೀಸೆಲ್ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ ರೂ.10 ರಷ್ಟು ಕಡಿತಗೊಳಿಸಿ ಶೂನ್ಯಕ್ಕೆ ಇಳಿಸಲಾಗಿದೆ. ತೈಲ ಕಂಪನಿಗಳು ಆಮದು ಮಾಡಿಕೊಳ್ಳುವ ಹೆಚ್ಚಿನ ವೆಚ್ಚವನ್ನು ಸರಿದೂಗಿಸಲು ಮತ್ತು ಆ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸುವುದನ್ನು ತಪ್ಪಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದ ಕಡಿತವನ್ನು ಮಾಡಿರುವುದು ಎಲ್ಲ ವರ್ಗದ ಜನತೆಯ ಮುಖದಲ್ಲಿ ಮಂದಹಾಸ ಮೂಡಿಸಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

