32
ಕೋಟೇಶ್ವರ : ಗ್ರಂಥಾಲಯಗಳು ಕೇವಲ ಪುಸ್ತಕಗಳ ಭಂಡಾರವಲ್ಲ, ಇವು ಜ್ಞಾನ, ಸಂಸ್ಕಾರ ಹಾಗೂ ಸಂಸ್ಕೃತಿಗಳನ್ನು ಪಸರಿಸುವ ಕೇಂದ್ರಗಳು. ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗಿರದೆ ಗ್ರಂಥಾಲಯದಲ್ಲಿರುವ ಇತರೆ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಬದುಕಿನುದ್ದಕ್ಕೂ ಸವಾಲುಗಳನ್ನು ಎದುರಿಸುವ ಈ ಕಾಲಘಟ್ಟದಲ್ಲಿ ವಿಷಯಗಳನ್ನು ಅರಿಯುವುದು ಬಹಳ ಮುಖ್ಯವಾಗಿರುತ್ತದೆ. ಮುಂದೆ ಎದುರಿಸಬೇಕಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಾಗಲೀ ಅಥವಾ ಜೀವನದ ಯಾವುದೇ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುವ ಸಾಮರ್ಥ್ಯವನ್ನು ಪಡೆಯಬಹುದು. ಯುವಜನರನ್ನು ಉತ್ತಮ ನಾಗರೀಕರನ್ನಾಗಿಸಿ ಸಮಾಜಕ್ಕೆ ಮೌಲ್ಯಗಳನ್ನು ಬಿತ್ತರಿಸಲು ಗ್ರಂಥಾಲಯಗಳೇ ಅಡಿಪಾಯ ಎಂದು ಸ್ಥಳೀಯ ಗುತ್ತಿಗೆದಾರರಾದ ಜೆ.ಪಿ. ಶೆಟ್ಟಿ ಕಟ್ಕೆರೆ ಅಭಿಪ್ರಾಯ ಪಟ್ಟರು. ಇವರು ಕೋಟೇಶ್ವರ ಶ್ರೀ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಪುಸ್ತಕ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷೀಯ ನುಡಿಗಳನ್ನಾಡಿ, ಈ ಪುಸ್ತಕ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ಓದುವ ಸಂಸ್ಕೃತಿ ಬೆಳೆಸುವ ಜೊತೆಗೆ ಗ್ರಂಥಾಲಯ ಬಳಕೆಯ ಮೇಲೆ ಹೊಸ ಚೈತನ್ಯವನ್ನು ಮೂಡಿಸಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ವಿವಿಧ ವಿಷಯಗಳ ಪುಸ್ತಕಗಳು, ಕಾದಂಬರಿಗಳು, ಜೀವನ ಚರಿತ್ರೆಗಳು, ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳು, ನಿಘಂಟುಗಳು, ಎನ್ಸೆöÊಕ್ಲೋಪೀಡಿಯ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಪುಸ್ತಕಗಳ ಸಂಗ್ರಹವನ್ನು ಪ್ರದರ್ಶಿಸಲಾಯಿತು. ಬಹು ಸಂಖ್ಯೆಯಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಪುಸ್ತಕಗಳ ಬಗ್ಗೆ ಮಾಹಿತಿ ಪಡೆದರು. ಎಸ್.ಎಲ್. ಭೈರಪ್ಪನವರಿಂದ ರಚಿಸಲ್ಪಟ್ಟ ಎಲ್ಲಾ ಕೃತಿಗಳನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಕಾರ್ಯಕ್ರಮಕ್ಕೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪ್ರೊಫೆಸರ್ ಹರೀಶ್ ಟಿ.ಜಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ನಿವೃತ್ತ ಶಿಕ್ಷಕಿ ಸೂರ್ಯಕಾಂತಿಯವರು ಆಗಮಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಗ್ರಂಥಾಲಯ ಸಮಿತಿಯ ವಿದ್ಯಾರ್ಥಿ ಪ್ರತಿನಿಧಿಗಳಾದ ವಿದ್ಯಾ ಶೇಟ್, ಆದರ್ಶ ಗಾಣಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಘಟಿಸಿದ ಕಾಲೇಜಿನ ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್.ಎಸ್. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ವೈಷ್ಣವಿ ಮತ್ತು ತಂಡ ಪ್ರಾರ್ಥಿಸಿದರು, ವಿದ್ಯಾ ಶೆಟ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ದೀಪಾ ವಂದಿಸಿದರು.

