ಕೋಟ : ಮೀನುಗಾರಿಕೆ ಇಲಾಖೆ, ಉತ್ತರ ಕನ್ನಡ ಜಿಲ್ಲೆ ಮತ್ತು ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ ಉಡುಪಿ ಜಿಲ್ಲೆ ಜಂಟಿಯಾಗಿ ಆಯೋಜನೆಯಲ್ಲಿ ಮುತ್ತು ಕೃಷಿ ಪ್ರಾಯೋಗಿಕ ಮಾಹಿತಿ ಕಾರ್ಯಾಗಾರ ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯ ಕುಮಟದ ಯಾಣದಲ್ಲಿ ಜರಗಿತು.
ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬೊಪಣ್ಣ.ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಸಕ್ತ ಮುತ್ತು ಕೃಷಿಕರಿಗೆ ಮುತ್ತು ಕೃಷಿ ಮತ್ತು ಮೀನು ಸಾಕಾಣಿಕೆ ಬಗ್ಗೆ ಮಾಹಿತಿ ನೀಡಿ ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಕಾರ್ಯವನ್ನು ಶ್ಲಾಘಿಸಿದರು. ಹಾಗೇ ಮೀನುಗಾರಿಕೆ ಇಲಾಖೆಯಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಉಡುಪಿ ಕಿನಾರ ಉತ್ಪಾದಕ ಕಂಪನಿಯ ನಿರ್ದೇಶಕ ಸುದಿನ ಕೋಡಿ ಮುತ್ತು ಕೃಷಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ 30 ಕ್ಕೂ ಆಸಕ್ತ ಮುತ್ತು ಕೃಷಿಕರನ್ನು ಗುರುತಿಸಿ ಮುತ್ತು ಕೃಷಿಯನ್ನು ಮಾದರಿ ಕೃಷಿಯನ್ನಾಗಿ ಮಾಡಲು ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕುಮಟಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕ ಸಚಿನ್ ಪುತ್ರನ್, ಭಟ್ಕಳ ತಾಲೂಕಿನ ಸಹಾಯಕ ನಿರ್ದೇಶಕ ರೇಣುಕಾ ಸ್ವಾಮಿ ಮತ್ತು ಮುತ್ತು ಕೃಷಿಕರಾದ ಪುರುಷೋತ್ತಮ್ ಮರಾಠಿ ಉಪಸ್ಥಿತರಿದ್ದರು

