ಗಂಗೊಳ್ಳಿ : ಗಣೇಶೋತ್ಸವ ಆಚರಣೆ ಸಂಬಂಧ ಅಗತ್ಯವಿರುವ ಅನುಮತಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಸ್ಥಳೀಯಾಡಳಿತಗಳಿಂದ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಗಣೇಶ ಮೂರ್ತಿ ವಿಸರ್ಜನೆಯ ಮಾರ್ಗವನ್ನು ಪೊಲೀಸ್ ಇಲಾಖೆಗೆ ಮುಂಚಿತವಾಗಿ ತಿಳಿಸಿ ಅದೇ ಮಾರ್ಗದಲ್ಲಿ ಮೆರವಣಿಗೆ ನಡೆಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸರಕಾರದ ನಿಯಮಗಳಿಗನುಸಾರ ಗಣೇಶೋತ್ಸವ ಆಚರಿಸಿದರೆ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ ಹೇಳಿದರು.
ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ಗಣೇಶೋತ್ಸವದ ಪೂರ್ವಭಾವಿಯಾಗಿ ತ್ರಾಸಿಯ ಕೊಂಕಣಿ ಖಾರ್ವಿ ಸಭಾಭವನದಲ್ಲಿ ಜರಗಿದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಯ ಪ್ರಮುಖರ ಶಾಂತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು
ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹರೀಶ್ ಮಾತನಾಡಿ ಸಾರ್ವಜನಿಕ ಸ್ಥಳದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ಸ್ಥಳೀಯಾಡಳಿತದಿಂದ ಪಡೆಯಬೇಕು ಭದ್ರತೆಗಾಗಿ ಸಿಸಿ ಕ್ಯಾಮರಾ ಅಳವಡಿಸಿ ಸ್ವಯಂಸೇವಕರನ್ನು ನಿಯೋಜಿಸಬೇಕು.ಸರಕಾರ ಸೂಚನೆ ಹಾಗೂ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಿ ಇಲಾಖೆ ಯೊಂದಿಗೆ ಸಹಕರಿಸಬೇಕು ಎಂದರು.
ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ (ತನಿಖೆ) ಬಸವರಾಜ್, ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.

