ಉಡುಪಿ: ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹ ಫಲನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.
ಅವರು ಇಂದು ನಗರದ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನಗಳು ಜನರ ಜೀವನ ಮಟ್ಟವನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಆಗಬೇಕು. ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನಾ ಸಮಿತಿಯ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ ಎಂದರು.
ರಾಜ್ಯದ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಗುರಿಯಾಗಿರಿಸಿಕೊಂಡು ಸೈಬರ್ ವಂಚಕರು ಯೋಜನೆಯ ಹಣ ಮಂಜೂರು ಮಾಡುವುದಾಗಿ ಹೇಳಿ ಬ್ಯಾಂಕ್ ಖಾತೆ ಮತ್ತು ಓ.ಟಿ.ಪಿ ಪಡೆದು ಹಣ ಕಬಳಿಸುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಯಾವುದೇ ಅನುಮಾನಾಸ್ಪದ ಕರೆ ಬಂದಾಗ ರಾಷ್ಟ್ರೀಯ ಸೈಬರ್ ಕ್ಲೈಮ್ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಿ, ದೂರು ನೀಡಬೇಕು. ವಂಚನೆಗೊಳಗಾದ ಒಂದು ಗಂಟೆಯ ಒಳಗೆ ಸಹಾಯವಾಣಿಗೆ ದೂರು ನೀಡಿದಾಗ ಶೇ. 90 ರಷ್ಟು ಹಣ ಮರುಪಾವತಿ ಆಗುವ ಸಾಧ್ಯತೆಗಳಿರುವುದಾಗಿ ತಿಳಿಸಿದ ಅವರು, ಈ ಬಗ್ಗೆ ಫಲಾನುಭವಿಗಳು ಜಾಗರೂಕರಾಗಿ ಇರುವಂತೆ ಅರಿವು ಮೂಡಿಸಬೇಕು ಎಂದರು

