Home » ಕಾಂಗ್ರೇಸಿನಿಂದ ಡೋಂಗಿ ರಾಜಕಾರಣ
 

ಕಾಂಗ್ರೇಸಿನಿಂದ ಡೋಂಗಿ ರಾಜಕಾರಣ

ಶಾಸಕಿ ಭಾಗೀರಥಿ ಮುರುಳ್ಯ

by Kundapur Xpress
Spread the love

ಬೈಂದೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮನೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಕಾಲೋನಿಗಳ ರಸ್ತೆ, ಚರಂಡಿ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಳಸಿ ನಮಗೆ ವಾಪಾಸ್ ನೀಡುವ ಮೂಲಕ ಡೋಂಗಿ ಮಾಡುತ್ತಿದ್ದಾರೆ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದರು.
ಕಿರಿಮಂಜೇಶ್ವರದಲ್ಲಿ ಭಾನುವಾರ ನಡೆದ ಬೈಂದೂರು ಮಂಡಲ ಬಿಜೆಪಿ ಎಸ್ಸಿ ಮೋರ್ಚಾದ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕರ ಉಚಿತ ಬಸ್, ಉಚಿತ ಕರೆಂಟ್, 2000 ನೀಡಿರಬಹುದು. ಅದು ನಮ್ಮದೇ ದುಡ್ಡು. ಎಸ್ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಿಟ್ಟಿರುವ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ನೀಡಿರುವ ಉಚಿತ ಪಡೆಯಲು ಯಾವುದೇ ಅಂಜಿಕೆ ಬೇಡ. ಮತದಾ‌ನ ಮಾತ್ರ ಯೋಚಿಸಿ ದೇಶದ ಅಭಿವೃದ್ಧಿ, ಸಮರ್ಥ ನಾಯಕತ್ವಕ್ಕೆ ನೀಡಬೇಕು. ಕೊರೋನಾ ಸಂದರ್ಭದಲ್ಲಿ ಇಡೀ ದೇಶದ ಜನತೆಗೆ ಉಚಿತ ವ್ಯಾಕ್ಸಿನ್ ನೀಡಿ ಜೀವ ಉಳಿಸಿರುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ. ಹೀಗಾಗಿ ಎಲ್ಲರೂ ಬಿಜೆಪಿಯನ್ನು ಬೆಂಬಲಿಸೋಣ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಡವರು ಉದ್ದಾರವಾಗುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಇರಬೇಕು ಎಂದುಕೊಂಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ದುಡ್ಡಿ ಯಾಕೆ ಬೇಕಿತ್ತು? ತಮ್ಮದೇ ಸಮುದಾಯವಾದ ಕುರುಬರ ಅಭಿವೃದ್ಧಿ, ಒಕ್ಕಲಿಗರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಯಾಕೆ ಗ್ಯಾರಂಟಿ ಬಳಸಿಲ್ಲ.‌ಕೇವಲ ಎಸ್ಸಿ, ಎಸ್ಟಿ ಹಣ ಮಾತ್ರ ಬಳಸಿದ್ದೇಕೆ ಎಂದು ಪ್ರಶ್ನಿಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಶಾಸಕರಾದ ಗುರುರಾಜ ಗಂಟಿಹೊಳೆಯವರು ಈಗಾಗಲೇ ಮಾಡಿದ್ದಾರೆ. ಇದರ ಸಾಧನೆಗಾಗಿ ಬೂತ್ ಕಡೆಗೆ ಸಮೃದ್ಧ ನಡಿಗೆ ಆಯೋಜಿಸಿ ಎಲ್ಲಾ ಬೂತ್ ಗಳಿಗೂ ಸಂಚರಿಸಿ ಕಾರ್ಯಕರ್ತರನ್ನು ಮುಖಂಡರನ್ನು ಸಂಘಟಿಸಿರುವ ಮಹತ್ತರ ಕಾರ್ಯ ಮಾಡಿದ್ದಾರೆ. ಶಾಸಕರಾದ ಗುರುರಾಜ ಗಂಟಿಹೊಳೆಯವರು ಎಲ್ಲರಿಗೂ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾವೆಲ್ಲರೂ ಒಟ್ಟಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮತಗಳು ಸಂಪೂರ್ಣವಾಗಿ ಬಿಜೆಪಿ ಅಭ್ಯರ್ಥಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.
ಎಸ್ಸಿ ಮೋರ್ಚಾದ ರಾಜ್ಯಾಧ್ಯಕ್ಷರೂ ಆದ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರು ಮಾತನಾಡಿ, ಬೈಂದೂರು ಕ್ಷೇತ್ರದಲ್ಲಿ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಈ ಬಾರಿ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲು ಶಾಸಕರಾದ ಗುರುರಾಜ ಗಂಟಿಹೊಳೆಯವರು ವಿನೂತನ ಪ್ರಯೋಗಗಳನ್ನು ಅಳವಡಿಸಿಕೊಂಡಿದ್ದಾರೆ. ಎಲ್ಲದಕ್ಕೂ ಮತದಾರರು ಖಂಡಿತವಾಗಿಯೂ ಯಶಸ್ಸು ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷದ ಆಡಳಿತದ ಬಲ, ಸಮರ್ಥ ನಾಯಕತ್ವ, ಅಭಿವೃದ್ಧಿ ಕಾರ್ಯಗಳು ನಮಗೆ ಶ್ರೀರಕ್ಷೆಯಾಗಿರಲಿದೆ ಎಂದು ಹೇಳಿದರು.
ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾತನಾಡಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿತ್ತು. ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಿನಯೋಗಿಸಿ ಆ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಬೈಂದೂರು ಕ್ಷೇತ್ರದಿಂದಲೇ ಬಿ. ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷ ಲೀಡ್ ನೀಡಲು ಈಗಾಗಲೇ ಪ್ರತಿ ಬೂತ್ ಗಳಲ್ಲೂ ಸಂಚಾರ ನಡೆಸಿದ್ದೇವೆ. ಇದರ ಜೊತೆಗೆ ಹಲವು ವಿನೂತನ ಮಾದರಿಯ ಪ್ರಚಾರ ಕಾರ್ಯಗಳು ನಡೆಯುತ್ತಿದೆ. ಬೂತ್ ಪ್ರಮುಖರ ಸಂಘಟನೆ, ಪೇಜ್ ಪ್ರಮುಖರಿಗೆ ಕಾರ್ಯಾಗಾರ ನಡೆಸಿದ್ದೇವೆ. ಮೂಕಾಂಬಿಕಾ ಕಾರೀಡಾರ್ ಮೂಲಕ ಸಮೃದ್ಧ ಬೈಂದೂರು ಪರಿಕಲ್ಪನೆ ಸಾಕಾರಕ್ಕೆ ಶ್ರಮಿಸಲಾಗುವುದು ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಎಸ್ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರಬಾಬು, ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸೇರಿದಂತೆ ಜಿಲ್ಲಾ ಹಾಗೂ ಮಂಡಲ ಮಟ್ಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

   

Related Articles

error: Content is protected !!