ಉಡುಪಿ : ಜಿಲ್ಲೆಯಲ್ಲಿ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಇಂದು ದಿನಾಂಕ 31-05-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳಲ್ಲಿ ವಾಸ್ತವ್ಯ ಮತ್ತು ವಾಸ್ತವ್ಯೇತರ ಕಟ್ಟಡ ನಿರ್ಮಾಣಕ್ಕೆ ಭೂಗಡಿ ಅಂಚಿನಿಂದ 6 ಮೀಟರ್ ಬಿಟ್ಟು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಕಡ್ಡಾಯ ಮತ್ತು ಲೋಕೋಪಯೋಗಿ ಇಲಾಖೆಯವರು ನಿರಾಕ್ಷೇಪಣ ಪತ್ರ ನೀಡಿದಲ್ಲಿ ಅದನ್ನು ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಯೋಜನಾ ಸದಸ್ಯರು ವಿನ್ಯಾಸ ಅನುಮೋದನೆ ಮಾಡುವಂತೆ ಸೂಚಿಸಿಲಾಯಿತು. ಕಾಪು ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಎಲ್ಲಾ ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ನಗರ ಯೋಜನೆ ಸದಸ್ಯರಿಗೆ ಸೂಚಿಸಲಾಯಿತು. ಗ್ರಾಮೀಣ ಭಾಗದಲ್ಲಿ ಕೆಲವು ಕಡೆಗಳಲ್ಲಿ ರಸ್ತೆಯ ಅಗಲೀಕರಣಕ್ಕೆ ಅವಕಾಶ ಇರುವುದಿಲ್ಲ ಅಂತಹ ರಸ್ತೆಯ ಪ್ರಸ್ತುತ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಏಕ ವಿನ್ಯಾಸಕ್ಕೆ ಅನುಮೋದನೆ ನೀಡುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಏಕ ವಿನ್ಯಾಸ ನಗರ ಯೋಜನೆ ಮತ್ತು ಗ್ರಾಮಾಂತರ ಅಧಿಕಾರಿಗಳು ಉಪಸ್ಥಿತರಿದ್ದರು.

