ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಸುಹಾಸ್ ಶೆಟ್ಟಿಯ ಅಂತ್ಯಕ್ರಿಯೆ ಅವರ ಹುಟ್ಟೂರು ಬಂಟ್ವಾಳ ತಾಲೂಕು ಕಾರಿಂಜದ ಪುಳಿಮಜಲಿನಲ್ಲಿ ಬಂಟ ಸಂಪ್ರದಾಯದ ಪ್ರಕಾರ ನಡೆಯಿತು. ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರ ನಾಯಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಸುಹಾಸ್ ಅಮರ್ ರಹೇ ರಾಜ್ಯ ಸರ್ಕಾರಕ್ಕೆ ಧಿಕ್ಕಾರ’ ಎಂಬ ಘೋಷಣೆಗಳು ಮೊಳಗಿದವು. ಇದಕ್ಕೂ ಮೊದಲು, ಮಂಗಳೂರಿನ ಎ.ಜೆ.ಆಸ್ಪತ್ರೆಯಿಂದ ಪುಳಿಮಜಲಿನವರೆಗೆ ನಡೆದ ಅಂತಿಮಯಾತ್ರೆಯಲ್ಲಿ ಅಪಾರ ಸಂಖ್ಯೆಯ ಬೆಂಬಲಿಗರು ಪಾಲ್ಗೊಂಡಿದ್ದರು

ಮಂಗಳೂರು ಸಂಪೂರ್ಣ ಬಂದ್ :
ಹತ್ಯೆ ಖಂಡಿಸಿ ಹಿಂದು ಸಂಘಟನೆಗಳು ನೀಡಿದ್ದ ಕರೆಗೆ ಮಂಗಳೂರು ನಗರ ಪೂರ್ಣ ಬಂದ್ ಆಗಿತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಕೆಲವೆಡೆ ಬಲವಂತವಾಗಿ ಬಂದ್ ಮಾಡಿಸಲು ಹಿಂದು ಸಂಘಟನೆಗಳು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರು, ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಬಂದ್ ವೇಳೆ ಮಂಗಳೂರಿನ ಹಂಪನಕಟ್ಟೆ ಬಳಿ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದು 9 ಬಸ್ಗಳಿಗೆ ಹಾನಿಯಾಗಿದೆ. ಬಳಿಕ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಪ್ರತಿಭಟನಾಕಾರರು ಕೆಲವಡೆ ಟೈರ್ಗೆ ಬೆಂಕಿ ಹಾಕಿ ರಸ್ತೆ ತಡೆನಡೆಸಿದರು.ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು

