ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳನ್ನು ಅತೀ ಶೀಘ್ರದಲ್ಲೇ ಬಂಧಿಸಲಾ ಗುವುದು, ಎಫ್ ಐ ಆರ್ ನಲ್ಲಿ ಎರಡು ಹೆಸರಿದೆ ಬಂಧನ ಆದ ನಂತರ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ, ಸದ್ಯ ತನಿಖೆ ಪ್ರಗತಿಯಲ್ಲಿದೆ, ಆ ಬಳಿಕ ಮಾಹಿತಿ ನೀಡುತ್ತೇವೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ.
ಬುಧವಾರ ಬಂಟ್ವಾಳ ಡಿವೈಎಸ್ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ತಮ್ಮನ್ನ ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಎಡಿಜಿಪಿ ಅವರು, ಸೋಮವಾರ ಮೂರು ಗಂಟೆಯ ಹೊತ್ತಿಗೆ ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ನಡೆದಿದ್ದು, ಘಟನೆಯ ಹಿನ್ನಲೆಯಲ್ಲಿ ಮಂಗಳೂರು ನಗರ ಹಾಗೂ ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದೆ. ಅಂತ್ಯ ಸಂಸ್ಕಾರ ಶಾಂತಿಯುತವಾಗಿ ಮುಗಿದಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.
ಹೆಚ್ಚುವರಿ ಪೊಲೀಸರ ನಿಯೋಜನೆ :
ಮುಂಜಾಗೃತಾಕ್ರಮವಾಗಿ ಉಡುಪಿ, ಚಿಕ್ಕಮಗಳೂರು, ಮೈಸೂರು ಹಾಗೂ ಕಾರವಾರದಿಂದ ಪೊಲೀಸರನ್ನು ನಿಯೋಜಿಸಲಾಗಿದೆ. ಗಾಳಿ ಸುದ್ದಿಗೆ ಕಿವಿ ಕೊಡದೆ ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು

