ಕಲಬುರಗಿ : ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಗುಂಡೇರಾವ ಚೋಪಡೆ (28) ಎಂಬಾತನಿಗೆ ಕಂಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. 2023ರ ಜುಲೈ 13ರಂದು ವಚನ ಪುಸ್ತಕವೊಂದನ್ನು ತರಲು ಆಳಂದ ತಾಲೂಕಿನ ಗ್ರಾಮವೊಂದರಿಂದ ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ಅಪರಾಧಿ ಗುಂಡೇರಾವ ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆಗೈದಿದ್ದ.
ನಂತರ ಪಕ್ಕದ ಹೊಲದ ಬಾವಿಯಲ್ಲಿ ಶವವನ್ನು ಎತ್ತಿ ಹಾಕಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ನಿಂಬರ್ಗಾ ಠಾಣೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಫೋಕ್ಲೋ ಕಾಯ್ದೆಯಡಿ ಗಲ್ಲು ಶಿಕ್ಷೆ ಹಾಗೂ ರೂ.1 ಲಕ್ಷ ದಂಡ ವಿಧಿಸಿದರು.
ಕಾನೂನು ಪ್ರಾಧಿಕಾರದ ವತಿಯಿಂದ 4 ಲಕ್ಷ ಪರಿಹಾರವನ್ನು ಮೃತ ಬಾಲಕಿಯ ತಾಯಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಫೋಕ್ಲೋ ಪ್ರಕರಣದಲ್ಲಿ ಜಿಲ್ಲೆಯಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆಯಾಗಿದ್ದು, ಇದೇ ಮೊದಲ ಪ್ರಕರಣ ಎನ್ನಲಾಗುತ್ತಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ತುಪ್ಪದ ವಾದ ಮಂಡಿಸಿದ್ದರು.

