ಬೆಂಗಳೂರು : ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರ ಹತ್ಯೆ ಪ್ರಕರಣದ ತನಿಖೆ ಮುಂದುವರಿದೆ. ಸಮಗ್ರ ತನಿಖೆಗಾಗಿ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ನೀಡಿದ್ದಾರೆ. ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರ ಬರ್ಬರ ಹತ್ಯೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಸಂಚಲನ ಮೂಡಿಸಿದೆ. ಆರೋಪಿಗಳಾದ ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ಪ್ರಕರಣದಲ್ಲಿ ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸೋಮವಾರ ರಾತ್ರಿ ಇಬ್ಬರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ ಮಾನಸಿಕ ಖಿನ್ನತೆಗೊಳಗಾಗಿರುವ ಕೃತಿಯನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಈ ಮಧ್ಯೆ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ತಾವು ಕೊಲೆ ಮಾಡಿದ ರೀತಿಯನ್ನು ಪೊಲೀಸರಿಗೆ ವಿವರಿಸಿದ್ದಾರೆ. ಪಲ್ಲವಿ ಮತ್ತು ಕೃತಿ ಸೇರಿ ಆರಂಭದಲ್ಲಿ ಕಾದ ಎಣ್ಣೆ ಹಾಗೂ ಖಾರದಪುಡಿಯನ್ನು ಓಂಪ್ರಕಾಶ್ ಮೇಲೆ ಎರಚಿದ್ದಾರೆ ಬಳಿಕ ಬಾಟಲ್, ಕುಟ್ಟಾಣಿಯಿಂದ ಹಿಗ್ಗಾಮುಗ್ಗಾ ಥಳಿಸಿ, ಚಾಕುವಿನಿಂದ ಒಂದೇ ಸಮನೆ ಚುಚ್ಚಿದ್ದಾರೆ. ಈ ಗಂಭೀರ ಹಲ್ಲೆಯಿಂದ ಓಂಪ್ರಕಾಶ್ 15 ನಿಮಿಷಗಳ ಕಾಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ ಎಂಬುದು ಗೊತ್ತಾಗಿದೆ.
ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
ಓಂ ಪ್ರಕಾಶ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ನಡೆಯಿತು.
ಪೊಲೀಸ್ ಪಡೆಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.

