ಬಂಟ್ವಾಳ : ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಅವರ ಬರ್ಬರ ಹತ್ಯೆ, ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಮಧ್ಯೆ ಹತ್ಯೆಯಾದ ರಹೀಂ ಪಾರ್ಥಿವ ಶರೀರದ ದಫನ ಕಾರ್ಯವು ಬುಧವಾರ ಮಧ್ಯಾಹ್ನದ ವೇಳೆಗೆ ಕೊಳತ್ತಮಜಲು ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.
ಮಂಗಳವಾರ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ತುಂಬಿಕೊಂಡು ಕುರಿಯಾಳ ಗ್ರಾಮದ ಇರಾಕೋಡಿಯ ರಾಜೀವಿ ಎಂಬವರ ಮನೆಯ ಬಳಿ ಖಾಲಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ದೀಪಕ್, ಸುಮಿತ್ ಸಹಿತ ಒಟ್ಟು 15 ಮಂದಿ ಏಕಾಏಕಿ ಸ್ಥಳಕ್ಕಾಗಮಿಸಿ, ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆಳೆದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

