ನವದೆಹಲಿ : ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಬೆನ್ನುನೋವು ಚಿಕಿತ್ಸೆ ಕಾರಣಕ್ಕಾಗಿ ಪಡೆದ ಜಾಮೀನು ಅವಧಿಯನ್ನು ಮುಂದೂಡುವಂತೆ ದರ್ಶನ್ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದ್ದು ಈ ಬೆನ್ನಲ್ಲೇ ಬುಧವಾರ ಕರ್ನಾಟಕ ಸರ್ಕಾರದ ಪ್ರಾಸಿಕ್ಯೂಷನ್ ಪರ ವಕೀಲರು ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿದ ಬಳಿಕವೇ ಪ್ರಾಸಿಕ್ಯೂಷನ್ ಕ್ರಮ ಕೈಗೊಂಡಿದೆ.
ಬಳ್ಳಾರಿ ಜೈಲಿನಲ್ಲಿ ಅತಿಯಾದ ಬೆನ್ನು ನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆಗಾಗಿ ಬೇಲ್ ನೀಡುವಂತೆ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ 6 ವಾರ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಹೊರಬಂದ ದರ್ಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೂ ಶಸ್ತ್ರಚಿಕೆತ್ಸೆ ಪಡೆದಿಲ್ಲ ಅಲ್ಲದೆ ಸರ್ಜರಿ ನಿರಾಕರಿಸಿದ್ದಾರೆ. ಹಾಗಾಗಿ ಜಾಮೀನನ್ನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ ಎನ್ನಲಾಗಿದೆ

