ಉಡುಪಿ : ನಗರ ಠಾಣೆಯಿಂದ ಕೂಗಳತೆ ದೂರದಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಗಳನ್ನು ಭೇದಿಸದ ಪೊಲೀಸರಿಗೆ ಈಗ ಮತ್ತೊಂದು ಪ್ರಕರಣ ತಲೆನೋವು ತಂದಿದೆ. ಈಗ ಕಳ್ಳರು ನೇರವಾಗಿ ಪೊಲೀಸ್ ಕ್ವಾಟ್ರಸ್ ಗೆ ನುಗ್ಗುವ ಮೂಲಕ ವ್ಯವಸ್ಥೆಯನ್ನು ಅಣಕಿಸಿದ್ದಾರೆ
ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹಕ್ಕೆ ಫೆ.24ರ ನಸುಕಿನ ವೇಳೆ ಕಳ್ಳರು ನುಗ್ಗಿದ್ದಾರೆ ಎನ್ನಲಾಗಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯಾದ ರಾಘವೇಂದ್ರ ಹಾಗೂ ರವಿರಾಜ್ ಎಂಬವರ ಮನೆಯ ಬೀಗ ಮುರಿದು ಕಳ್ಳರು ಒಳನುಗ್ಗಿದ್ದಾರೆ. ರಾಘವೇಂದ್ರ ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನಲ್ಲಿ ತರಬೇತಿಯಲ್ಲಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ. ಅದೇ ರೀತಿ ರವಿರಾಜ್ ಫೆ.23ರಂದು ತಡರಾತ್ರಿ ಮನೆಗೆ ಬೀಗ ಹಾಕಿ ಕರ್ತವ್ಯಕ್ಕೆ ತೆರಳಿದ್ದರು. ಈ ವೇಳೆ ನುಗ್ಗಿದ ಕಳ್ಳರು, ರಾಘವೇಂದ್ರ ಅವರ ಮನೆಯಲ್ಲಿದ್ದ ಬೆಳ್ಳಿಯ ಕಾಲುಗೆಜ್ಜೆ ಹಾಗೂ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ರವಿರಾಜ್ ಮನೆಯಲ್ಲಿ ಯಾವುದೇ ಸೊತ್ತುಗಳು ಕಳವಾಗಿಲ್ಲ ಎಂದು ತಿಳಿದುಬಂದಿದೆ.
ಸೃಳಕ್ಕೆ ಉಡುಪಿ ನಗರ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು ತನಿಖೆ ಮುಂದುವರಿದಿದೆ.

