Home » ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
 

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ಪರಿಶ್ರಮದ ಬದುಕು ರೂಪಿಸಿಕೊಳ್ಳಿ: ಎಂ. ಕೃಷ್ಣಮೂರ್ತಿ ಮಂಜ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎಂ.ಎಸ್. ಕ್ರೀಡಾಂಗಣದ ತೆರೆದ ವೇದಿಕೆಯಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಹೈದರಾಬಾದಿನ ಸುಪ್ರಭಾತ ಗ್ರೂಪ್ ಆಫ್ ಹೋಟೆಲ್ಸ್ನ ಆಡಳಿತ ನಿರ್ದೇಶಕ, ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಮುಖ್ಯ ಅತಿಥಿಯಾಗಿ ಮಾತನಾಡಿ, ನಮ್ಮ ಬದುಕಿನ ಶಿಲ್ಪಿಗಳು ನಾವೇ. ವಿದ್ಯಾರ್ಥಿ ದೆಸೆಯಲ್ಲಿಯೇ ಪಠ್ಯಕೇಂದ್ರಿತ ಶಿಕ್ಷಣದೊಂದಿಗೆ ಬದುಕಿಗೆ ಬೇಕಾಗಿರುವ ಮೌಲ್ಯಗಳನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪರಿಶ್ರಮದ ಬದುಕನ್ನು ರೂಪಿಸಿಕೊಂಡರೆ, ಯಶಸ್ಸಿನ ಹಾದಿ ತಲುಪಲು ಸಾಧ್ಯ ಎಂದರು.
ಇನ್ನೋರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಇದರ ಅಧ್ಯಕ್ಷ ಹಾಗೂ ಉಡುಪಿ ಇಂಡಿಯನ್ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ, ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸಂದರ್ಭದಲ್ಲಿ ಜ್ಞಾನ, ಕೌಶಲ್ಯ ಹಾಗೂ ಮೌಲ್ಯಗಳನ್ನು ವರ್ಧಿಸಿಕೊಳ್ಳಬೇಕು. ಸಂವಿಧಾನದ ಚೌಕಟ್ಟಿನಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರೂಪಿಸಿಕೊಂಡರೆ ಭವಿಷ್ಯದಲ್ಲಿ ಯಶಸ್ಸು ಸಾಧ್ಯ ಎಂದರು.
ಸಭಾಧ್ಯಕ್ಷತೆ ವಹಿಸಿದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ ಅವರು ಸಂಸ್ಥೆಗೆ ಸ್ಥಳದಾನ ಮಾಡಿದ ಮಹಾತಾಯಿ ಸೌಕೂರು ಸೇರ್ವೇಗಾರ ಮನೆ ಶ್ರೀಮತಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಹಕಾರವನ್ನು ಸ್ಮರಿಸಿದರು. ಇದೇ ಸಂದರ್ಭ ತಮಿಳುನಾಡಿನ ಕೊಯಮುತ್ತೂರ್ ಭಾರತೀಯಾರ್ ವಿಶ್ವವಿದ್ಯಾನಿಲಯದಿಂದ “ಕರಾವಳಿ ಕರ್ನಾಟಕದಲ್ಲಿ ಮಹಿಳಾ ಉದ್ಯಮಿಗಳಿರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿಯವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಹಾಗೆಯೇ ಬಿ.ಬಿ. ಹೆಗ್ಡೆ ಹಾಗೂ ವಿಶಾಲಾಕ್ಷಿ ಬಿ. ಹೆಗ್ಡೆಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಸಂಸ್ಥೆ ಸಾಗಿ ಬಂದ ಹಾದಿಯ ಕುರಿತು ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ, ಜೊತೆ ಕಾರ್ಯದರ್ಶಿ ಶ್ರೀ ಸುಧಾಕರ್ ಶೆಟ್ಟಿ ಬಾಂಡ್ಯ, ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕಿ ಹಾಗೂ ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಂದಾ ರೈ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕ ಹಾಗೂ ಡೀನ್ ಅಕಾಡೆಮಿಕ್ ಗಿರಿರಾಜ್ ಭಟ್ ಹಾಗೂ ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅವಿತಾ ಕೊರೆಯಾ ಸನ್ಮಾನ ಪತ್ರ ವಾಚಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವಿಲ್ಮಾ ಶೆರಲ್ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

Related Articles

error: Content is protected !!