ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್- ಬೆಂಕಿ ರಹಿತ ಅಡುಗೆ ಸ್ಪರ್ಧೆ ಕಾರ್ಯಕ್ರಮ ಏಪ್ರಿಲ್ 18ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ಬಸ್ರೂರಿನ ಸೈಂಟ್ ಪಿಲಿಪ್ ನೆರಿ ಸೆಂಟ್ರಲ್ ಶಾಲೆಯ ಶಿಕ್ಷಕಿ ಅಮಿತಾ ಅವರು ಮಾತನಾಡಿ, ಅಡುಗೆ ಭಾರತೀಯ ಸಂಸ್ಕೃತಿಯ ಮಹತ್ವದ ಭಾಗಗಳಲ್ಲಿ ಒಂದು. ಪ್ರದೇಶದಿಂದ ಪ್ರದೇಶಕ್ಕೆ ವಿವಿಧ ಸ್ವರೂಪದ ಆಹಾರ ಪದ್ಧತಿಯನ್ನು ಭಾರತದಲ್ಲಿ ಕಾಣಬಹುದು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಆಹಾರದ ವೈಜ್ಞಾನಿಕ ಮಹತ್ವದ ಕುರಿತು ತಿಳಿದುಕೊಳ್ಳಬೇಕು ಎಂದರು. ಇದೇ ಸಂದರ್ಭ ಅವರು ಆಹಾರ ತಯಾರಿಕೆಯಲ್ಲಿ ಆಧುನಿಕತೆಯ ಅಲಂಕಾರವಿರಲಿ, ಸಾಂಪ್ರದಾಯಿಕತೆಯ ಶುದ್ಧತೆಯಿರಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅವರು ಕಾಲೇಜು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾದ ಆಹಾರ ಪದ್ಧತಿ ಮತ್ತು ಸಂಸ್ಕೃತಿಯ ಮಹತ್ವದ ಕುರಿತು ತಿಳಿಸಿದರು.
ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀ ಸತೀಶ್ ಕಾಂಚನ್ ಉಪಸ್ಥಿತರಿದ್ದರು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್ ಸ್ವಾಗತಿಸಿ, ಪ್ರಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕ ಶ್ರೀ ಯೋಗೀಶ್ ಶ್ಯಾನುಭೋಗ್ ವಂದಿಸಿದರು. ವಿದ್ಯಾರ್ಥಿನಿ ಲಾವಣ್ಯ ನಿರೂಪಿಸಿದರು.

