ತೆಕ್ಕಟ್ಟೆ : ಸೇವಾ ಸಂಗಮ ವಿದ್ಯಾಕೇಂದ್ರ ವಿದ್ಯಾಗಿರಿ ಶಾಲೆಯಲ್ಲಿ ನೋಟ್ ಪುಸ್ತಕ ಹಸ್ತಾಂತರ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸುರೇಶ್ ಬೆಟ್ಟಿನ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಕ್ಷಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಬೆಟ್ಟಿನ್ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, “ಶಿಕ್ಷಣಕ್ಕೆ ನೀಡುವ ದಾನವು ಮಕ್ಕಳ ಭವಿಷ್ಯ ರೂಪಿಸುವ ಮಹತ್ವದ ಕಾರ್ಯವಾಗಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮ ಕೈಲಾದ ಸಹಾಯವನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ” ಎಂದು ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸೇವಾ ಸಂಗಮ ವಿದ್ಯಾಕೇಂದ್ರದ ಉಪಾಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದಿನೇಶ್ ಪ್ರಿಂಟರ್ಸ್ ಮಾಲೀಕರಾದ ಹಾಗೂ ರಕ್ಷಾ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿಗಳಾದ ಶ್ರೀ ದಿನೇಶ್ ಕುಂದಾಪುರ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಸಾಮಾಜಿಕ ಕಾಳಜಿಯನ್ನು ಮೆರೆದರು.
ಇದೇ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸುರೇಶ್ ಬೆಟ್ಟಿನ್ ಅವರು ಶಾಲೆಗೆ ಏರ್ ಕೂಲರ್ ಅನ್ನು ಕೊಡುಗೆಯಾಗಿ ನೀಡಿ ಶಾಲೆಯ ಸೌಕರ್ಯ ವೃದ್ಧಿಗೆ ಸಹಕರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಹರ್ಷ ಕೋಟೇಶ್ವರ ಅವರು ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ ಶೃತಿ ಮಾತಾಜಿ ವಂದಿಸಿದರು. ಮಾತಾಜಿ ಶ್ರೀಮತಿ ಶಕೀಲಾ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

