ಕುಂದಾಪುರ : ವಿದ್ಯಾರ್ಥಿಗಳು ಶಾಲೆ ಬಿಟ್ಟು ಮನೆಗೆ ಬಂದ ತಕ್ಷಣ ಒಂದಷ್ಟು ಹೊತ್ತು ಪೋಷಕರು ಮಕ್ಕಳೊಂದಿಗೆ ಸಮಯ ಕೊಡಬೇಕು ಮಕ್ಕಳೊಂದಿಗೆ ಆಟ ಆಡಬೇಕು ಮಕ್ಕಳೊಂದಿಗೆ ಶಾಲೆಯ ಚಟುವಟಿಕೆಗಳ ಬಗ್ಗೆ ಚರ್ಚಿಸಬೇಕು ಮಕ್ಕಳ ಬೆನ್ನು ತಟ್ಟುವ ಕೆಲಸ ಮಾಡಬೇಕು ಆಗ ವಿದ್ಯಾರ್ಥಿಗಳು ಮೊಬೈಲ್ ಕಡೆಗೆ ಹೆಚ್ಚು ಗಮನ ಕೊಡದೆ ಶಿಕ್ಷಣದ ಕಡೆಗೆ ಒತ್ತುಕೊಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ರಾಜ್ಯೋತ್ಸವ ಪುರಸ್ಕತೆ ಕಾರ್ಕಳ ವಂದನಾ ರೈ ಹೇಳಿದರು.
ಅವರು ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲಮಾಧ್ಯಮ ಪ್ರಾಥಮಿಕ ಪೂರ್ವ ಶಾಲೆಯ ಕಿಂಡರ್ ಗಾರ್ಟನ್ ವಿದ್ಯಾರ್ಥಿಗಳ ಪದವಿ ಘಟಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ಹಾಗೂ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ವಹಿಸಿದ್ದರು ಅವರು ಮಾತನಾಡಿ ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರವೂ ಮುಖ್ಯವಾಗಿದ್ದು ಪೋಷಕರು ಮತ್ತು ಶಿಕ್ಷಕರು ಜೊತೆಯಾಗಿ ಮಗುವಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ಕೊಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಪೋಷಕರ ನಿರೀಕ್ಷೆಯನ್ನು ಸುಜ್ಞಾನ ಎಜುಕೇಶನ್ ಟ್ರಸ್ಟ್ ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದರು.
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ. ಸ್ವಾಗತಿಸಿದರು. ಶಿಕ್ಷಕಿ ದೀಕ್ಷಾ ವಂದಿಸಿದರು. ವಂದನಾ ರೈ ಪೋಷಕರಿಗೆ ಮತ್ತು ಮಕ್ಕಳಿಗೆ ನೃತ್ಯ ಮತ್ತು ಆಟೋಟ ಸ್ಪರ್ಧೆಯನ್ನು ನಡೆಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು


