ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನದ ನಾಲ್ಕು ರಾಜ್ಯಗಳ ಪ್ರವಾಸ ಗುರುವಾರ ಆರಂಭಗೊಳ್ಳಲಿದ್ದು, ಹಲವು ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. 2 ದಿನ ಪ್ರಧಾನಿ ಮೋದಿ ತಮ್ಮ ನಾಲ್ಕು ರಾಜ್ಯಗಳ ಪ್ರವಾಸದಲ್ಲಿ ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ್ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.
ಗ್ಯಾಂಗ್ಟಕ್ನ ಅಟಲ್ ಅಮೃತ್ ಉದ್ಯಾನದಲ್ಲಿ ಭಾರತ ರತ್ನ ಪುರಸ್ಕೃತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರತಿಮೆಯನ್ನು ಮೋದಿ ಅನಾವರಣಗೊಳಿಸಲಿದ್ದಾರೆ. ನಾಮಿಯಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ 500 ಬೆಡ್ ಗಳ ವ್ಯವಸ್ಥೆಯ ಜಿಲ್ಲಾ ಆಸ್ಪತ್ರೆಯನ್ನು ಅವರು ಲೋಕಾರ್ಪಣೆ ಮಾಡಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಪ್ರಮುಖವಾಗಿ ನಗರ ಅನಿಲ ಸರಬರಾಜು ಯೋಜನೆಗೆ ಪ್ರಧಾನಿ ಶಿಲಾನ್ಯಾಸ ಮಾಡಲಿದ್ದು, ಶುಕ್ರವಾರ ಬಿಹಾರ್ ಪ್ರವಾಸದ ವೇಳೆ ಪಾಟ್ನಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಬಿಹಾರ್ನ ಕಾರಾಕಾಟ್ನಲ್ಲಿ ಒಟ್ಟು 48,520 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಲಿದ್ದು, ಹಲವು ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಉತ್ತರ ಪ್ರದೇಶದ ಕಾನ್ಸುರ್ನಲ್ಲಿ 20,900 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರಕ್ಕೇರಿ ಜೂನ್ 9ರಂದು ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಹಿನ್ನಲೇ ಹಲವು ರಾಜ್ಯಗಳಲ್ಲಿ ಅಭಿವೃದ್ಧಿ ಯೋಜನೆಗಳ ಚಾಲನೆ ನೀಡುವುದರಲ್ಲಿ ವ್ಯಸ್ತರಾಗಿದ್ದಾರೆ.

