126
ಬೆಂಗಳೂರು : ವಿಶ್ವದ ಎಲ್ಲ ದೇಶಗಳ ಹಿಂದು ಸಮುದಾಯ ಮತ್ತು ನಾಯಕರು ಹಾಗೂ ಸಂಸ್ಥೆಗಳು ಬಾಂಗ್ಲಾದೇಶದ ಹಿಂದು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಬೆಂಬಲಕ್ಕೆ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಆಗ್ರಹಪೂರ್ವಕ ನಿರ್ಣಯ ಕೈಗೊಂಡಿದೆ.
ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ ನಿರೂಪಣೆಯಲ್ಲಿ ಅತ್ಯುನ್ನತ ಸ್ಥಾನ ಪಡೆದಿರುವ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಎರಡನೇ ದಿನ ಈ ನಿರ್ಣಯ ಕೈಗೊಳ್ಳಲಾಗಿದೆ. ಬಾಂಗ್ಲಾದೇಶದ ಹಿಂದು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳು ಅಲ್ಲಿನ ಮೂಲಭೂತವಾದಿ ಇಸ್ಲಾಮಿಕ್ ಶಕ್ತಿಗಳಿಂದ ಎದುರಿಸುತ್ತಿರುವ ನಿರಂತರ ಮತ್ತು ಯೋಜನಾಬದ್ಧವಾಗಿ ನಡೆಯುತ್ತಿರುವ ಹಿಂಸಾಚಾರ, ಅನ್ಯಾಯ ಮತ್ತು ದಬ್ಬಾಳಿಕೆಗಳ ಕುರಿತು ಅಖಿಲ ಭಾರತೀಯ ಪ್ರತಿನಿಧಿ ಸಭೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಮಾನವ ಹಕ್ಕು ಉಲ್ಲಂಘನೆಯ ಗಂಭೀರ ಪ್ರಕರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

