110
ನವದೆಹಲಿ : 166 ಜನರನ್ನು ಬಲಿ ಪಡೆದ 2008ರ ಮುಂಬೈ ಸರಣಿ ದಾಳಿ ಪ್ರಕರಣದ ಮಾಸ್ಟಮೈಂಡ್ ತಹಾವುರ್ ರಾಣಾ (64ವರ್ಷ) ಕೊನೆಗೂ ಅಮೆರಿಕದಿಂದ ಗಡೀಪಾರಾಗಿ ಭಾರತಕ್ಕೆ ಬಂದಿಳಿದಿದ್ದಾನೆ. ಎನ್ಐಎ ಮತ್ತು ಎನ್ಎಸ್ಜಿ ಕಮಾಂಡೋಗಳ ತಂಡ ವಿಶೇಷ ವಿಮಾನದಲ್ಲಿ ಆತನನ್ನು ಗುರುವಾರ ಸಂಜೆ ವೇಳೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಕರೆತಂದಿದೆ. ಅದರ ಬೆನ್ನಲ್ಲೇ ಮುಂಬೈ ದಾಳಿ ಪ್ರಕರಣದ ತನಿಖೆ ನಡೆ ಸುತ್ತಿರುವ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಅಧಿಕಾರಿಗಳು ರಾಣಾನನ್ನು ಬಂಧಿಸಿದ್ದಾರೆ
ಇದರೊಂದಿಗೆ ಭಯೋತ್ಪಾದನೆ ವಿಷಯದಲ್ಲಿ ಭಾರತದ ಹೋರಾಟ ಮತ್ತು ಭಾರತದ ರಾಜತಾಂತ್ರಿಕತೆಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ರಾಣಾನ ವಿಚಾರಣೆಯು, ಮುಂಬೈ ದಾಳಿಯಲ್ಲಿ ಪಾಕಿಸ್ತಾನ ಸರ್ಕಾರ ಮತ್ತು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಕೈವಾಡದ ಕುರಿತು ಮತ್ತಷ್ಟು ಬೆಳಕು ಚೆಲ್ಲುವ ಸಾಧ್ಯತೆ ಇದೆ.

