ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಸಂನ್ಯಾಸ ಸುವರ್ಣ ಮಹೋತ್ಸವ ಪ್ರಯುಕ್ತ ಉಡುಪಿ ಶ್ರೀಕೃಷ್ಣ ದೇವರಿಗೆ ಸಮರ್ಪಿಸಲು ಉದ್ದೇಶಿಸಿರುವ ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರು ಭಾನುವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಚಾಲನೆ ನೀಡಿದರು
ಬಳಿಕ ಸ್ವಾಮೀಜಿ ಆಶೀರ್ವಚನ ನೀಡಿ, ಶ್ರೀಕೃಷ್ಣ ಉತ್ಸವ ಪ್ರಿಯನಾಗಿದ್ದು, ಭಗವಂತನಲ್ಲಿ ಮೊರೆ ಇಟ್ಟರೆ ಇಷ್ಟಾರ್ಥ ಪ್ರಾಪ್ತಿಯಾಗುತ್ತದೆ. 365 ದಿನವೂ ಉತ್ಸವ ನೆರವೇರಿಸುವ ಉದ್ದೇಶದಿಂದ ನಿರ್ಮಾಣಗೊಳ್ಳಲಿರುವ ಪಾರ್ಥಸಾರಥಿ ಸುವರ್ಣ ರಥಕ್ಕೆ ಶ್ರೀಮಠದ ವತಿಯಿಂದ 10 ಲಕ್ಷ ರೂಪಾಯಿ ನೀಡಲಾಗುವುದು ಎಂದರು
ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಸಮಾಜದ ಸರ್ವರ ಮನೋರಥವನ್ನು ಪೂರೈಸುವ ರಾಘವೇಂದ್ರ ಸ್ವಾಮಿಯ ಮಠದ ಸ್ವಾಮೀಜಿಯಿಂದ ಪಾರ್ಥ ಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ‘ಇದು ಕೋಟಿ ಗೀತಾ ಪರ್ಯಾಯದ ಐತಿಹಾಸಿಕ ದಿನ. ಇಂದಿನಿಂದಲೇ ರಥ ಚಲಿಸಲು ಶುರುವಾಗಿದೆ ಎಂದರು.
ಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಪ್ರೀಂದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶಾಸಕರಾದ ಯಶಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್. ಎಸ್.ಬಲ್ಲಾಳ್, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಯೋಗೀಶ್ ಶೆಟ್ಟಿ ಕಾಪು, ಗಯಾ ರಾಮಾ ಚಾರ್ಯ, ರಮ್ಯಾ ಶ್ರೀನಾಥ್, ಬೆಳಪು ದೇವಿ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

