ಬೆಂಗಳೂರು : ಭಾರತ-ಪಾಕಿಸ್ತಾನ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಪುನಾರಂಭಗೊಳ್ಳಲು ಮಳೆರಾಯ ಅಡ್ಡಿಪಡಿಸಿದ. ಶನಿವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ರೈಡರ್ಸ್ ನಡುವಿನ ಪಂದ್ಯ ಟಾಸ್ ಕೂಡ ಕಾಣದೆ ರದ್ದಾಯಿತು.
ಉಭಯ ತಂಡಗಳಿಗೆ ತಲಾ 1 ಅಂಕ ಹಂಚಲಾಯಿತು. ಇದರಿಂದಾಗಿ ಹಾಲಿ ಚಾಂಪಿಯನ್ ಕೆಕೆಆರ್ ಪ್ಲೇ-ಆಫ್ ರೇಸ್ನಿಂದ ಹೊರಬಿದ್ದರೆ, ಆರ್ಸಿಬಿ ಪ್ಲೇ-ಆಫ್ ಹೊಸ್ತಿಲು ತಲುಪಿದ್ದು, ಅಗ್ರ-4ರಲ್ಲಿ ಸ್ಥಾನ ಬಹುತೇಕ ಖಚಿತಗೊಂಡಿದೆ. ತಂಡ ಬಾಕಿ ಇರುವ 2 ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದರೂ, ಅಗ್ರ-2ರಲ್ಲಿ ಸ್ಥಾನ ಗಳಿಸಿ, ಕ್ವಾಲಿಫೈಯರ್-1 ಪಂದ್ಯಕ್ಕೆ ಅರ್ಹತೆ ಪಡೆಯುವ ಸಾಧ್ಯತೆಯೂ ಇದೆ.
ಶನಿವಾರ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆ ಮುನ್ಸೂಚನೆ ಇತ್ತು. ನಿರೀಕ್ಷೆಯಂತೆಯೇ ಸಂಜೆ 6.15ರ ಸುಮಾರಿಗೆ ಆರಂಭಗೊಂಡ ಮಳೆ ರಾತ್ರಿಯಾದರೂ ನಿಲ್ಲಲಿಲ್ಲ. ಸತತವಾಗಿ ಮಳೆ ಸುರಿದ ಕಾರಣ, ಪಂದ್ಯವನ್ನು ರದ್ದುಗೊಳಿಸದೆ ಬೇರೆ ಆಯ್ಕೆಯೇ ಇರಲಿಲ್ಲ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಬ್-ಏರ್ ವ್ಯವಸ್ಥೆ ಇರುವ ಕಾರಣ ಮಳೆ ನಿಂತ 20-30 ನಿಮಿಷಗಳಲ್ಲಿ ಆಟ ಆರಂಭಿಸಬಹುದು. ಆದರೆ ಮಳೆ ನಿಲ್ಲಲೇ ಇಲ್ಲ.

