ಕಲಬುರಗಿ : ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಅಲ್ಪಸಂಖ್ಯಾತರ ಓಲೈಕೆಯ ಬಜೆಟ್ ಆಗಿರೋದು ಸ್ಪಷ್ಟ. ಇದರ ವಿರುದ್ಧ ಬಿಜೆಪಿ ಸೋಮವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಪುನರುಚ್ಚರಿಸಿದ್ದಾರೆ.
ಕಲಬುರಗಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್ ಬಜೆಟ್ ವಿರುದ್ದದ ಬಿಜೆಪಿಯ ಈ ಹೋರಾಟಕ್ಕೆ ಜೆಡಿಎಸ್ನ ಬೆಂಬಲವೂ ಇದೆ. ಈಗಾಗಲೇ ಈ ಬಗ್ಗೆ ಜೆಡಿಎಸ್ ಶಾಸಕಾಂಗ ನಾಯಕ ಸುರೇಶ ಜೊತೆ ಮಾತಾಡಿರುವೆ, ಬೆಂಗಳೂರಿಗೆ ಹೋದ ನಂತರ ಎಚ್. ಡಿ.ಕುಮಾರಸ್ವಾಮಿ ಅವರೊಂದಿಗೂ ಚರ್ಚಿಸುವೆ ಎಂದರು.
ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ ಅಲ್ಲ, ಮುಸ್ಲಿಂ ಓಲೈಕೆ ನೆಪದಲ್ಲಿ ಹಿಂದೂಗಳಿಗೆ ಅವಮಾನ ಮಾಡಲಾಗುತ್ತಿದೆ. ಇದರ ವಿರುದ್ಧ ನಾವು ಹೋರಾಟ ರೂಪಿಸಿದ್ದೇವೆ. ಜೆಡಿಎಸ್ ಜೊತೆ ಸೇರಿ ಸೋಮವಾರದಿಂದ ರಾಜ್ಯದಲ್ಲಿ ಹೋರಾಟ ನಡೆಸುತ್ತೇವೆ. ಅಲ್ಪಸಂಖ್ಯಾತರ ಓಲೈಕೆ ಬಿಟ್ಟರೆ ಬಜೆಟ್ನಲ್ಲಿ ಬೇರೆನೂ ಇಲ್ಲ. ಸಿದ್ದರಾಮಯ್ಯ ಅವರಂತಹ ಅನುಭವಿ ಸಿಎಂರಿಂದ ಈ ರೀತಿಯ ಬಜೆಟ್ ನಿರೀಕ್ಷೆ ಮಾಡಿರಲಿಲ್ಲ ಎಂದರು.

