ಬೆಂಗಳೂರು : ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಮಂಗಳವಾರ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರು.
ಕೊಲೆ ಪ್ರಕರಣ ಸಂಬಂಧ ಸಾಕ್ಷಿಗಳವಿಚಾರಣೆ ಕೈಗೆತ್ತಿಕೊಂಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಆರೋಪಿ ವಿನಯ್ ಕುಲಕರ್ಣಿಗೂ ಹಾಜರಾಗಲು ಸೂಚಿಸಿತ್ತು. ಆದರೆ, ವಿನಯ್ ಕುಲಕರ್ಣಿ ಗೈರು ಹಾಜರಾಗಿದ್ದರು. ಈ ವೇಳೆ, ವಿನಯ್ ಪರ ವಕೀಲರು ಗೈರು ಹಾಜರಿಗೆ ಕೆಲವು ಕಾರಣ ನೀಡಿ ಹಾಜರಾತಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸಮ್ಮತಿ ಸೂಚಿಸಿದ ನ್ಯಾಯಾಲಯ, ವಿಚಾರಣೆಯನ್ನು ಜೂ.13ಕ್ಕೆ ಮುಂದೂಡಿತು.
ಶುಕ್ರವಾರ ನ್ಯಾಯಾಲಯಕ್ಕೆ ಶರಣು ಸಾಧ್ಯತೆ:
ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಕೆಲ ದಿನಗಳ ಹಿಂದೆಯಷ್ಟೇ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ರದ್ದುಗೊಳಿಸಿದೆ. ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿದೆ. ಹೀಗಾಗಿ, ವಿನಯ್ ಕುಲಕರ್ಣಿ ಜೂ.13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆಯಿದೆ. ಈ ವೇಳೆ, ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯನ್ನು ಬಂಧಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ

