ಬೆಳ್ತಂಗಡಿ : ‘ಧರ್ಮಸ್ಥಳ ಗ್ರಾಮದಲ್ಲಿ ಕೊಲೆಗೀಡಾದ ಹಾಗೂ ಅತ್ಯಾಚಾರಕ್ಕೆ ಒಳಗಾದ ನೂರಾರು ಶವಗಳನ್ನು ಹೂತಿದ್ದೇನೆ’ ಎಂದು ಅನಾಮಿಕ ವ್ಯಕ್ತಿ ನೀಡಿದ ದೂರಿನ ಮೇರೆಗೆ ನಡೆಯುತ್ತಿರುವ ವಿದ್ಯಮಾನಗಳು ಹಾಗೂ ಧರ್ಮಸ್ಥಳ ಗ್ರಾಮದಲ್ಲಿ ಅಸ್ಥಿಪಂಜರಗಳಿಗಾಗಿ ನಡೆದಿರುವ ಉತ್ಖನನ ಖಂಡಿಸಿ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳ ಚಲೋ ನಡೆಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು, ನಾಯಕರು, ಕಾರ್ಯಕರ್ತರು ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿ, ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರ ಜೊತೆ ವಿಜಯೇಂದ್ರ ಮಾತನಾಡಿದರು.
‘ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಎಸ್ಐಟಿ ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು. ವೃಥಾ ದೂರು ನೀಡಿರುವ ಮಾಸ್ಕ್ ಮ್ಯಾನ್ಗೆ ಶಿಕ್ಷೆ ವಿಧಿಸಬೇಕು. ಹಾಗೂ ಇತನ ಬೆನ್ನ ಹಿಂದಿರುವ ವ್ಯಕ್ತಿಗಳನ್ನು ಸರ್ಕಾರ ಪತ್ತೆಹಚ್ಚಬೇಕು’ ಆಗ್ರಹಿಸಿದರು.

