ಉಡುಪಿ : ರಾಜ್ಯದಲ್ಲಿ ಹಿಂದುಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಹಿಟ್ಲರ್ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಉತ್ತರ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಉಡುಪಿಯಲ್ಲಿ ಬಿಜೆಪಿ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಬಿಜೆಪಿ ಕಾರ್ಯಕರ್ತರ, ಪತ್ರಕರ್ತರ ಮೇಲೆ ಕೇಸುಗಳನ್ನು ಹಾಕುತ್ತಿದೆ. ಕಾರ್ಯಕರ್ತರು ಪೊಲೀಸ್ ದಬ್ಬಾಳಿಕೆಗೆ ಹೆದರಬೇಕಾಗಿಲ್ಲ, ಮುಂದೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಮುಂದೆ ಇರುವ ಸವಾಲು ಮತ್ತು ಗುರಿಯಾಗಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಆಗ ಬಡ್ಡಿ ಸಮೇತ ಉತ್ತರ ನೀಡೋಣ ಎಂದರು
ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಧೋರಣೆ ನೋಡಿದರೆ, ತಾನು ಕೇವಲ ಸಾಬರಿಂದಲೇ ಅಧಿಕಾರಕ್ಕೆ ಬಂದಿದ್ದೇನೆ. ಅವರಿಗೆ ಮಾತ್ರ ತಾನು ಮುಖ್ಯಮಂತ್ರಿ ಎಂಬಂತಿದೆ ಅವರ ವರ್ತನೆ. ಅಹಿಂದದ ಹೆಸರು ಹೇಳಿ ಅಧಿಕಾರಕ್ಕೆ ಬಂದು ಹಿಂದುಳಿದವರನ್ನೇ ಮರೆತಿದ್ದಾರೆ. ಇದು ಜನಪ್ರಿಯ ಸರ್ಕಾರ ಅಲ್ಲ, ಇದು ಜಾಹೀರಾತು ಸರ್ಕಾರ, ಇದು ಅಭಿವೃದ್ಧಿ ಪರವಲ್ಲ, ಅಭಿವೃದ್ಧಿ ಶೂನ್ಯ ಸರ್ಕಾರ, ಇದು ಬಡವರ ಪರವಲ್ಲ, ಬೆಲೆ ಏರಿಸಿ ಬಡವರಿಗೆ ಬರೆ ಎಳೆದ ಸರ್ಕಾರ ಎಂದವರು ಟೀಕಿಸಿದರು.
ನಮ್ಮ ಜನಾಕ್ರೋಶ ಯಾತ್ರೆ ಯಾವುದೇ ಗಿಮಿಕ್ ಅಲ್ಲ, ಗಿಮಿಕ್ ಮಾಡುವುದಕ್ಕೆ ಈಗ ಯಾವುದೇ ಚುನಾವಣೆಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರದ ಬೆಲೆ ಏರಿಕೆ, ಮುಸಲ್ಮಾನರ ಓಲೈಕೆ, ಎಸ್ಸಿಎಸ್ಪಿ ಅನುದಾನದ ದುರ್ಬಳಕೆ, ಭ್ರಷ್ಟಾಚಾರ ವಿರುದ್ಧ ಜನತೆಗೆ ನ್ಯಾಯ ಕೊಡಿಸುವುದೇ ಈ ಯಾತ್ರೆಯ ಉದ್ದೇಶ ಎಂದವರು ಹೇಳಿದರು

