ಮೈಸೂರು ; ಐಪಿಎಲ್ ಕಪ್ ಗೆದ್ದ ಆರ್ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಸರ್ಕಾರಕ್ಕೆ ಯಾವುದೇ ಮುಜುಗರ ಇಲ್ಲ. ಸೂಕ್ತ ಬಂದೋಬಸ್ತ್ ಮಾಡದ ತಪ್ಪಿಗೆ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಸಂಜೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಮುಂದೆ ಸರ್ಕಾರದ ವತಿಯಿಂದ ಆರ್ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮ ಮಾಡಿದೆವು. ಆರ್ಡಿಪಿಆರ್ ಮುಖ್ಯ ಕಾರ್ಯದರ್ಶಿಗಳು ವಿಧಾನಸೌಧದ ಮುಂದೆ ಮಾಡೋಣ ಸರ್, ಇದಕ್ಕೆ ಪೊಲೀಸ್ ಅಧಿಕಾರಿಗಳೆಲ್ಲಾ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. ಅದಕ್ಕೆ ಸರಿ ಕಾರ್ಯಕ್ರಮ ಮಾಡಿ ಎಂದು ತಿಳಿಸಿದೆ. ಹಾಗಾಗಿ ಅಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು, ದುರಂತಗಳು ನಡೆದಿಲ್ಲ ಎಂದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಮಾಡಿದ್ದು ಕೆಸಿಎನವರು. ನಮ್ಮ ಬಳಿ ಬಂದು ಕಾರ್ಯಕ್ರಮ ಮಾಡುತ್ತಿದ್ದೇವೆ ಬನ್ನಿ, ರಾಜ್ಯಪಾಲರೂ ಬರುತ್ತಿದ್ದಾರೆ ಎಂದು ಕರೆದಿದ್ದರು. ಹಾಗಾಗಿ ಆ ಕಾರ್ಯಕ್ರಮಕ್ಕೆ ಹೋಗಿದ್ದೆವು.

