ಶಿವಮೊಗ್ಗ : ಕಾಶ್ಮೀರದ ಪಹಲ್ಗಾಂವ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದಿರುವ ಪಾಕಿಸ್ತಾನ ಪ್ರೇಂತ ಭಯೋತ್ಪಾದನಾ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದು ಶತ ಸಿದ್ದ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಭಯೋತ್ಪಾದಕ ದಾಳಿಗೆ ತುತ್ತಾದ ಉದ್ಯಮಿ ಮಂಜುನಾಥ ರಾವ್ ಪಾರ್ಥೀವ ಶರೀರಕ್ಕೆ ಕೇಂದ್ರ ಸರ್ಕಾರದ ಪರವಾಗಿ ಶ್ರದ್ದಾಂಜಲಿ ನುಡಿ ನಮನ ಸಲ್ಲಿಸಿದ ಬಳಿಕ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ನೆಲೆಸಿದ್ದ ಶಾಂತಿ-ಸೌಹಾರ್ದತೆಗೆ ಭಯೋತ್ಪಾದಕರು ಕೊಳ್ಳಿ ಇಡುವ ಕೃತ್ಯವೆಸಗಿದ್ದಾರೆ. ಭಾರತ ಇದಕ್ಕೆ ತಕ್ಕ. ಶಾಸ್ತಿ ಮಾಡುತ್ತದೆ ಎಂದು ಘೋಷಿಸಿದರು.
ಪಹಲ್ಗಾಂವ್ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ ರಾವ್ ಸೇರಿ ದಂತೆ 27 ಜನ ಬಲಿಯಾಗಿದ್ದಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಕುಕೃತ್ಯವೆಸಗಿದ ಭಯೋತ್ಪಾದಕರನ್ನು ಹಾಗೇ ಬಿಡುವುದಿಲ್ಲ. ನಮ್ಮ ಜನರ ಸಾವು ನೋವು ತಂದೊಡ್ಡಿದವರಿಗೆ ತಕ್ಕ ಪಾಠ, ಶಿಕ್ಷೆ ವಿಧಿಸಿಯೇ ತೀರುತ್ತೇವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಭಯೋತ್ಪಾದನೆಗೆ ಇತಿಶ್ರೀ ಹಾಡಲು ಸಂಕಲ್ಪ ತೊಟ್ಟಿದೆ. ಅಮಾಯಕರನ್ನು ಬಲಿ ಪಡೆದಿರುವ ಪಾಕ್ ಉಗ್ರರನ್ನು ಸದೆ ಬಡಿಯುತ್ತದೆ ಎಂದು ತಿಳಿಸಿದರು

