ಬೆಂಗಳೂರು : 2020 ರ ಆ.11ರಂದು ದೇಶಾದ್ಯಂತ ಸದ್ದು ಮಾಡಿದ್ದ ಬೆಂಗಳೂರಿನ ಕೆ.ಜಿ.ಹಳ್ಳಿ- ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧ ತಪ್ರೊಪ್ಪಿಗೆ ಹೇಳಿಕೆ ನೀಡಿದ ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 36 ಸಾವಿರ ರೂಪಾಯಿ ದಂಡ ವಿಧಿಸಿ ನಗರದ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.
ಈ ಮೂಲಕ ಪ್ರಕರಣದಲ್ಲಿ ಮೊದಲ ಬಾರಿಗೆ ಮೂವರಿಗೆ ಶಿಕ್ಷೆಯಾದಂತಾಗಿದೆ. ಇದು ನ್ಯಾಯಕ್ಕೆ ಸಂದ ಜಯ ಎಂದು ಎನ್ ಐಎ ಪರ ವಕೀಲ ಹೇಳಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿಗಳಾದ ಪ್ರಕರಣದ 14ನೇ ಆರೋಪಿ ಸೈಯದ್ ಇಕ್ರಮುದ್ದೀನ್ ಅಲಿಯಾಸ್ ಸೈಯದ್ ನವೀದ್ (44), 16ನೇ ಆರೋಪಿ ಸೈಯದ್ ಆಸೀಫ್ (46) ಮತ್ತು 18ನೇ.ಆರೋಪಿ ಮೊಹಮ್ಮದ್ ಅತೀಫ್ (26) ಶಿಕ್ಷೆಗೆ ಗುರಿಯಾದವರು.
ಎನ್ಐಎ ತನಿಖಾಧಿಕಾರಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಈ ಮೂವರು ಆರೋಪಿಗಳನ್ನು ವಿಡಿಯೋ ಕಾನ್ಸರೆನ್ಸ್ ಮುಖಾಂತರ ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯ ಮೂವರು ಆರೋಪಿಗಳಿಗೂ ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಎನ್ಐಎ ಪರ ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ :
ಪುಲಿಕೇಶಿನಗರದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಹೀಗಾಗಿ 2020ರ ಆ.11ರಂದು ರಾತ್ರಿ ಸುಮಾರು 8.45ಕ್ಕೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದರು ಸುಮಾರು 25-30 ಮಂದಿ ನವೀನ್ನನ್ನು ಬಂಧಿಸುವಂತೆ ಆಗ್ರಹಿಸಿ ಗಲಭೆ ಪ್ರಾರಂಭವಾಗಿತ್ತು

