ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆ ಶಿಶು ಯೋಜನಾಭಿವೃದ್ಧಿ ಅಧಿಕಾರಿ (ಸಿಡಿಪಿಒ) ಖಾತೆಗೆ ಹಣ ವರ್ಗಾ ವಣೆ ಮಾಡಲಾಗುತ್ತದೆ. ನಂತರ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗು ವುದು ಎಂದು ವಿವರಿಸಿದರು.
‘ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿ ಇದ್ದುದರಿಂದ ಹಣ ಸಂದಾಯ ಸ್ವಲ್ಪ ವಿಳಂಬ ವಾಯಿತು. ಈಗಾಗಲೇ ಹಣ ಬಿಡುಗಡೆಗೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ’ ಎಂದು ಹೆಬ್ಬಾಳ್ಳರ್ ತಿಳಿಸಿದರು. ವಿರೋಧ ಪಕ್ಷದವರಿಗೆ ಟೀಕೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡುತ್ತಿದ್ದಾರೆ ಎಂದರು.

