ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವ್ಯಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂಕ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಲೋಕಾರ್ಪಣೆ ಮಾಡಿದರು.

ಯಲಹಂಕದ ಕೆಪಿಸಿಎಲ್ ಯೋಜನಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಈ ವಿದ್ಯುತ್ ಸ್ಥಾವರನ್ನು ಮಂಗಳವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದರು.
ವಿದ್ಯುತ್ನಲ್ಲಿ ಸ್ವಾವಲಂಬನೆ ಸಾಧ್ಯವಾಗದಿದ್ದರೆ ಆರ್ಥಿಕ ಪ್ರಗತಿ ಸಾಧ್ಯವಿಲ್ಲ, ವಾಣಿಜ್ಯ, ಕೃಷಿ, ಗೃಹ ಬಳಕೆಗೆ ವಿದ್ಯುತ್ ಅನಿವಾರ್ಯ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದಿದ್ದಲ್ಲಿ ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಗುಣಮಟ್ಟದ ವಿದ್ಯುತ್ ಪೂರೈಕೆ ಜತೆಗೆ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡುತ್ತದೆ ಎಂದು ಹೇಳಿದರು

