ಬೆಂಗಳೂರು : ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಸಾರಿಗೆ ಮುಷ್ಕರ ನಡೆಸಿದ್ದು, ತನ್ನ ಆದೇಶ ಧಿಕ್ಕರಿಸಿ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದಕ್ಕಾಗಿ ನೌಕರರ ಸಂಘಟನೆಗೆ ಹೈಕೋರ್ಟ್ ತೀವ್ರ ತಪರಾಕಿ ಹಾಕಿದೆ. ಈ ಎಚ್ಚರಿಕೆಗೆ ಮಣಿದು ಮುಷ್ಕರವನ್ನು ವಾಪಸು ತೆಗೆದುಕೊಳ್ಳಲಾಗಿದ್ದು, ಮಂಗಳವಾರ ಸಂಜೆಯಿಂದಲೇ ಬಸ್ ಸಂಚಾರ ಯಥಾ ರೀತಿ ಆರಂಭವಾಗಿದೆ. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಮುಷ್ಕರ ನಿಲ್ಲಿಸದಿದ್ದರೆ ಪದಾಧಿಕಾರಿಗಳನ್ನು ಬಂಧಿಸುವುದಾಗಿಯೂ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 3.40ರ ಗಂಟೆಗೆ ಅನಿವಾರ್ಯವಾಗಿ ಮುಷ್ಕರ ಹಿಂಪಡೆಯಲಾಯಿತು. ಅಲ್ಲಿಯವರೆಗೆ ಅಂದರೆ ಸುಮಾರು 10 ತಾಸು ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿ, ರಾಜ್ಯಾದ್ಯಂತ ಸಾರ್ವಜನಿಕರು ತೀವ್ರ ಸಮಸ್ಯೆ ಅನುಭವಿಸಬೇಕಾಯಿತು.
ಸಾರಿಗೆ ನೌಕರರ ನಡೆಯನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಸಾರಿಗೆ ಮುಷ್ಕರದ ಮೇಲೆ ಸೋಮವಾರ ವಿಧಿಸಿದ್ದ ನಿರ್ಬಂಧವನ್ನು ಮುಂದುವರೆಸಿದೆ. ಆ.7ರವರೆಗೆ ಯಾವುದೇ ಮುಷ್ಕರ ನಡೆಸದಂತೆ ಸ್ಪಷ್ಟ ನಿರ್ದೇಶನ ನೀಡಿದೆ.
ಒಂದು ವೇಳೆ ಮುಷ್ಕರ ಮುಂದುವರೆಸಿದರೆ ಎಸ್ಮಾ ಕಾಯ್ದೆಯಡಿ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದೂ ಸೂಚಿಸಿದೆ. ಹೀಗಾಗಿ ಸಾರ್ವಜನಿಕರ ಸಾರಿಗೆ ನೆಚ್ಚಿಕೊಂಡಿರುವ ನಾಗರಿಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ

