ಮೈಸೂರು : ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ
ಮೈಸೂರು ಜಿಲ್ಲೆ ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿ ಗಳ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ. ಇನ್ನೂ ಸುಗ್ರೀವಾಜ್ಞೆ ಹೊರಡಿಸಿಲ್ಲ. ಸುಗ್ರೀ ವಾಜ್ಞೆ ಹೊರಡಿಸಿದ ನಂತರ ಇದಕ್ಕೆ ಕಡಿವಾಣ ಬೀಳಲಿದೆ. ಜನ ಎಲ್ಲಿ ಸಾಲ ಸಿಗುತ್ತೋ ಅಲ್ಲಿಗೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಅವರು ಹೆಚ್ಚು ಬಡ್ಡಿ ಹಾಕುತ್ತಿದ್ದಾರೆ. ಔಟ್ ಸೋರ್ಸ್ ಮೂಲಕ ಗೂಂಡಾಗಳನ್ನು ಬಳಸಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿಷಾದಿಸಿದರು.
ಮೈಕ್ರೋ ಫೈನಾನ್ಸ್ಗಳು ಆರ್ಬಿಐ ನಿಯಮದಡಿ ಬರುತ್ತವೆ. ಶೇ.28, 29, 30ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಬೇಸತ್ತು ಸಾಲಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಯಾರು ವಿಪರೀತವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದಾರೋ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಜನರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.

