ಬೆಂಗಳೂರು : ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಜಾರಿಯಾಗಿರುವ ಸುಗ್ರೀವಾಜ್ಞೆ ಕಾಯ್ದೆಯ ಮೂಲ ಉದ್ದೇಶ ವಿಫಲವಾಗಬಾರದು. ಕಾಯ್ದೆಯ ಎಲ್ಲ ಅಂಶಗಳನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿ ಪಡಿಸಬೇಕು. ಒಂದು ವೇಳೆ ಪರವಾನಗಿ ಅಥವಾ ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ಇದ್ದರೆ ತಕ್ಷಣ ಬಂದ್ ಮಾಡಬೇಕು ಎಂದು ಹೇಳಿದ್ದಾರೆ.
ಮೈಕ್ರೋಫೈನಾನ್ಸ್ ಕಂಪೆನಿಗಳ ನಿಯಂತ್ರಣದ ಕುರಿತ ಹೊರಡಿಸಿರುವ ಸುಗ್ರೀವಾಜ್ಞೆ ಅನುಷ್ಠಾನದ ಕುರಿತು ಕಾನೂನು ಸಚಿವ ಎಚ್.ಕೆ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೇರಿ ವಿವಿಧ ಹಿರಿಯ ಅಧಿಕಾರಿಗಳ ಜತೆ ಶನಿವಾರ ಅವರು ಸಭೆ ನಡೆಸಿದರು

