ಧಾರವಾಡ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ತಿರಸ್ಕರಿಸಿದ್ದು, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸದ್ಯಕ್ಕೆ ನಿರಾಳರಾದಂತಾಗಿದೆ.
ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಅದರ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಶುಕ್ರವಾರ ಪ್ರಕಟಿಸಿದರು.
ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಲೋಕಾಯುಕ್ತ ಸಂಸ್ಥೆಯು ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಲೋಕಾಯುಕ್ತ ನಡೆಸಿದ ತನಿಖೆಯು ಪಕ್ಷಪಾತ, ಲೋಪದೋಷ ಅಥವಾ ಕಳಪೆಯಾಗಿದೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಹೀಗಾಗಿ, ಈ ಪ್ರಕರಣವನ್ನು ಹೆಚ್ಚಿನ ತನಿಖೆ ಅಥವಾ ಮರು ತನಿಖೆಗೆ ಸಿಬಿಐಗೆ ವರ್ಗಾಯಿಸಲು ಈ ನ್ಯಾಯಾಲಯ ಸೂಚಿಸುವುದಿಲ್ಲ. ಈ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದರು

