ಬೆಂಗಳೂರು : ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ (68 ವರ್ಷ) ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಾಗಿದ್ದ ಓಂ ಪ್ರಕಾಶ್ ಅವರ ಹತ್ಯೆ ಭಾನುವಾರ ಮಧ್ಯಾಹ್ನ ಸುಮಾರು 3.30ಕ್ಕೆ ನಡೆದಿದ್ದು, ಘಟನೆ ಸಂಬಂಧ ಮೃತರ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಆಸ್ತಿ ವಿಚಾರ ಸಂಬಂಧ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ

ಬಿಹಾರ ಮೂಲದ ಓಂ ಪ್ರಕಾಶ್ 1981ರ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದರು. ರಾಜ್ಯದ ವಿವಿಧ ಜಿಲ್ಲೆ ಹಾಗೂ ನಗರ ‘ಮತ್ತು ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು. 2015ರಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ 2017ರಲ್ಲಿ ನಿವೃತ್ತರಾಗಿದ್ದರು. ನಿವೃತ್ತಿ ಬಳಿಕ ಎಚ್ಎಸ್ಆರ್ ಲೇಔಟ್ನ ಮೂರು ಅಂತಸ್ತಿನ ಮನೆಯಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು

ಕೊಲೆ ಮಾಡಿ ಸ್ನೇಹಿತೆಗೆ ಕರೆ :
ಭಾನುವಾರ ಮನೆಯಲ್ಲಿ ಓಂಪ್ರಕಾಶ್, ಪತ್ನಿ ಪಲ್ಲವಿ ಹಾಗೂ ಪುತ್ರಿ ಇದ್ದರು ಎನ್ನಲಾಗಿದೆ. ಮಧ್ಯಾಹ್ನ ದಂಪತಿ ನಡುವೆ ಗಲಾಟೆಯಾಗಿದೆ. ಈ ವೇಳೆ ಪತ್ನಿ ಪಲ್ಲವಿ ಚಾಕುವಿನಿಂದ ಇರಿದು ಒಂ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾರೆ. ಬಳಿಕ ಸ್ನೇಹಿತೆಯಾಗಿರುವ ಮಾಜಿ ಐಪಿಎಸ್ ಅಧಿಕಾರಿಯೊಬ್ಬರ ಪತ್ನಿಗೆ ವಿಡಿಯೋ ಕರೆ ಮಾಡಿ ‘ಐ ಕಿಲ್ಲಡ್ ಮಾನ್ಸ್ಟರ್’ ಎಂದು ಹೇಳಿದರು ಎನ್ನಲಾಗಿದೆ. ಬಳಿಕ ಆ ಮಾಜಿ ಐಪಿಎಸ್ ಅಧಿಕಾರಿ ಪತ್ನಿ ಗಾಬರಿಗೊಂಡು ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಓಂ ಪ್ರಕಾಶ್ ಕೊಲೆ ವಿಚಾರ ತಿಳಿದು ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸೇರಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ

