ಬೆಂಗಳೂರು : ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಲಾರಿ ಮಾಲೀಕರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಗುರುವಾರ ಅಂತ್ಯವಾಗಿದೆ. ಲಾರಿ ಮಾಲೀಕರ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ಲಾರಿ ಮಾಲೀಕರು ಘೋಷಿಸಿದರು.
ಡೀಸೆಲ್ ಬೆಲೆ ಇಳಿಕೆ ಸೇರಿ ಪ್ರಮುಖವಾಗಿ ಬೇಡಿಕೆಗಳನ್ನು ಮುಂದಿಟ್ಟುಕೊಂಡುಏ.14ರ ಮಧ್ಯರಾತ್ರಿಯಿಂದ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಲಾರಿ ಮುಷ್ಕರ ನಡೆಸಲಾಗುತ್ತಿತ್ತು. ಮುಷ್ಕರ ಕೈ ಬಿಡುವಂತೆ ಮಂಗಳವಾರ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾರಿ ಮಾಲೀಕರೊಂದಿಗೆ ಸಭೆ ನಡೆಸಿದ್ದರು, ಆದರೆ, ಮುಷ್ಕರದಿಂದ ಹಿಂದೆ ಸರಿದಿರಲಿಲ್ಲ. ಗುರುವಾರ ಸಂಜೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಲಾರಿ ಮಾಲೀಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಲಾರಿ ಮಾಲೀಕರ ಬೇಡಿಕೆಗಳ ಕುರಿತು ಕೂಲಂಕಷವಾಗಿ ಚರ್ಚೆ ನಡೆಸಿ ಅವುಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅದಕ್ಕೆ ಒಪ್ಪಿದ ಲಾರಿ ಮಾಲೀಕರು, ಸಂಜೆಯಿಂದಲೇ ಮುಷ್ಕರ ಕೈ ಬಿಡುವುದಾಗಿ ಘೋಷಿಸಿದರು

