ಹುಬ್ಬಳ್ಳಿ : ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ. ಇದಕ್ಕೆ ಹಳೇ ಹುಬ್ಬಳ್ಳಿ, ಕೆಜೆ ಹಳಿ-ಡಿಜೆ ಹಳ್ಳಿ ಹಾಗೂ ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆಗಳೇ ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮತಾಂಧ ಶಕ್ತಿಗಳಿಗೆ ಹೆದರಿಕೆಯೇ ಇಲ್ಲದಂತಾಗಿದೆ. ಮೈಸೂರಿನ ಉದಯಗಿರಿಯಲ್ಲಿ ನಡೆದ ಘಟನೆ ಪೂರ್ವಯೋಜಿತವಾಗಿದೆ. ಈ ಘಟನೆಯ ಕುರಿತು ಸಮಗ್ರ ತನಿಖೆಯಾಗಬೇಕಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಹಿಂದಿನ ಘಟನೆಗಳಲ್ಲಿನ ಆರೋಪಿಗಳನ್ನು ಬಿಡದೇ ಕಠಿಣ ಶಿಕ್ಷೆಗೆ ಗುರಿಪಡಿಸಿದ್ದರೆ ಮೈಸೂರಲ್ಲಿ ಗಲಭೆ ನಡೆಯುತ್ತಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪಿಎಫ್ಐ, ಎಸ್ಡಿಪಿಐ ಸಂಘಟನೆಗಳ ಮೇಲಿನ ಪ್ರಕರಣ ವಾಪಸ್ ಪಡೆಯಲಾಗಿದೆ. ತುಷ್ಟಿಕರಣ ನೀತಿ ಇದೇ ರೀತಿ ಮುಂದುವರಿದಲ್ಲಿ ರಾಜ್ಯದಿಂದಲೂ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ತಮ್ಮ ಐಡಿಯಾಲಜಿಗೆ ತಕ್ಕಂತೆ ಮಾತನಾಡುವುದನ್ನು ಕೈಬಿಟ್ಟು, ಗಲಭೆಯ ವೇಳೆ ಆಗಿರುವ ನಷ್ಟವನ್ನು ಗಲಭೆಕೋರರಿಂದ ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತಿದ್ದರೆ ಇದನ್ನು ಮಾಡಲಿ ಎಂದು ಜೋಶಿ ಸವಾಲು ಹಾಕಿದರು. ಅಲ್ಲದೆ, ಆರ್.ಎಸ್.ಎಸ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದರು

