ಬೆಂಗಳೂರು : ರಾಜ್ಯಾಧ್ಯಕ್ಷರ ನೇಮಕ, ಮರುನೇಮಕ ಮತ್ತಿತರ ವಿಚಾರದಲ್ಲಿ ನನಗೆ ಗೊಂದಲ ಇಲ್ಲ ಎಂದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಜತೆಗೆ, ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ವರಿಷ್ಠರು ಬಗೆಹರಿಸಲಿದ್ದಾರೆ ಎಂದ ಅವರು ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎಂದೂ ಮನವಿ ಮಾಡಿದ್ದಾರೆ. ಬಾಕಿ ಉಳಿದ ಜಿಲ್ಲೆಗಳ ಘಟಕಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ 2-3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದೂ ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ ಈವರೆಗೆ ಕೇವಲ ಹತ್ತು ರಾಜ್ಯಗಳಿಗೆ ಮಾತ್ರ ರಾಜ್ಯಾಧ್ಯಕ್ಷರ ನೇಮಕ ಆಗಿದೆ. ಇನ್ನುಳಿದ ರಾಜ್ಯಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಬೇಕಿದೆ ಎಂದರು. ನಮ್ಮ ರಾಜ್ಯದಲ್ಲಿ ಈವರೆಗೆ 23 ಜಿಲ್ಲಾ ಘಟಕಗಳಿಗೆ ಅಧ್ಯಕ್ಷರ ನೇಮಕ ಆಗಿದೆ. ಒಂದು ಜಿಲ್ಲೆಯ ನೇಮಕ ತಡೆಹಿಡಿಯಲಾಗಿದೆ. ಬಾಕಿ ಉಳಿದ ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಎರಡು ಅಥವಾ ಮೂರು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಈ ಕುರಿತ ಪಟ್ಟಿಯನ್ನು ಕೇಂದ್ರ ಸಮಿತಿಗೆ ಕಳುಹಿಸಿಕೊಡಲಾಗುವುದು ಎಂದರು

