ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ಸ್ಪಂದಿಸದ ಸಚಿವರ ಅಸಹಕಾರ, ನಿರ್ಲಕ್ಷ್ಯ ಧೋರಣೆ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮುಂದೆ ಸ್ವಪಕ್ಷೀಯ ಶಾಸಕರೇ ದೂರುಗಳ ಸುರಿಮಳೆಗೈದಿದ್ದು ಮುಖ್ಯವಾಗಿ ತಮ್ಮ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿ ಆರ್ ಪಾಟೀಲ್, ರಾಜು ಕಾಗೆ ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ಹಾಗೂ ಶಾಸಕರನ್ನು ನಿರ್ಲಕ್ಷಿಸುತ್ತಿರುವ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸೋಮವಾರ ರಾಜ್ಯಕ್ಕೆ ಆಗಮಿಸಿರುವ ಸುರ್ಜೇವಾಲಾ ಮೊದಲಿಗೆ ಬಿ.ಆರ್. ಪಾಟೀಲ್ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಈ ವೇಳೆ ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಅಧಿಕಾರಿಗಳು ಶಾಸಕರಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದ ಬಗ್ಗೆ ವಿವರಣೆ ಪಡೆದರು. ಬಿ.ಆರ್. ಪಾಟೀಲ್ ಅವರ ದೂರುಗಳ ಬಗ್ಗೆ ದಾಖಲು ಮಾಡಿಕೊಂಡು, ಈ ಸಮಸ್ಯೆಯನ್ನು ಪಕ್ಷದ ವೇದಿಕೆಯಲ್ಲೇ ಬಗೆಹರಿಸಿಕೊಡಲಾಗುವುದು. ಈ ಬಗ್ಗೆ ಬಹಿರಂಗ ಹೇಳಿಕೆ ನೀಡಿ ಬಿಜೆಪಿಗೆ ಅಸ್ತ್ರ ನೀಡಬೇಡಿ ಎಂದು ಮನವೊಲಿಸಿದರು ಎಂದು ತಿಳಿದುಬಂದಿದೆ.

