ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿದೆ. ಯತ್ನಾಳ್ ಅವರು ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಿರುವುದು ಇದು ಮೂರನೇ ಬಾರಿ.
ಪದೇ ಪದೇ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದ ಯತ್ನಾಳ್ ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಕಳೆದ ಫೆ.10ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನೀಡಿದ ವಿವರಣೆಯನ್ನು ಪರಿಗಣಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ. ಪಕ್ಷದಶಿಸ್ತನ್ನು ಪದೇ ಪದೇ ಉಲ್ಲಂಘಿಸಿರುವುದು, ಹಿಂದೆ ಶೋಕಾಸ್ ನೋಟಿಸ್ ನೀಡಿದ ಬಳಿಕವೂ ಉತ್ತಮ ನಡವಳಿಕೆ ಪ್ರದರ್ಶಿಸದೇ ಇರುವುದನ್ನು ಉಲ್ಲೇಖಿಸಲಾಗಿದೆ.
ಕಾಕತಾಳೀಯ ಎಂಬಂತೆ ಬುಧವಾರ ಯತ್ನಾಳ್ ಮತ್ತು ವಿಜಯೇಂದ್ರ ಇಬ್ಬರೂ ನಾಯಕರು ಅನ್ಯ ಕಾರ್ಯದ ನಿಮಿತ್ತ ದೆಹಲಿಯಲ್ಲೇ ಇದ್ದರು

