ಉಡುಪಿ : ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು ಕಂಡು ಹಿಡಿಯುವುದೇ ಹೆಚ್ಚಾಗಿದೆ. ಹೀಗಾಗಿ ನನ್ನ ಬಾಯಿಂದ ಯಾವುದೇ ತಪ್ಪು ನುಡಿಸದಂತೆ ಶ್ರೀಕೃಷ್ಣ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ. ಶ್ರೀಕೃಷ್ಣನ ದಿವ್ಯ ದರ್ಶನ ಮಾಡಿ ಶ್ರೀಗಳ ಜೊತೆಯಲ್ಲಿ ಮಧ್ವಾಚಾರ್ಯರ ಅಂಚೆಚೀಟಿ ಬಿಡುಗಡೆ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದು ಭಾವಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರ 64 ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಆಚಾರ್ಯ ಮಧ್ವರ ಅಂಚೆ ಚೀಟಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಧರ್ಮ, ಪೂಜೆ, ಭಕ್ತಿ ಪ್ರದರ್ಶನಕ್ಕಿರುವ ವಸ್ತುಗಳಲ್ಲ ಎಲ್ಲರ ಆಚಾರ ವಿಚಾರಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕಿರುವುದು ನಮ್ಮ ಕರ್ತವ್ಯ. ನಾನು ಅನೇಕ ಬಾರಿ ಕೃಷ್ಣನ ಮಠಕ್ಕೆ ಹಾಗೂ ಕೃಷ್ಣನ ದಿವ್ಯ ಸಾನಿಧ್ಯಕ್ಕೆ ಬಂದಿದ್ದೇನೆ. ಶ್ರೀಗಳು ನನಗೆ ಕೃಷ್ಣನ ವಿಶ್ವರೂಪ ದರ್ಶನ ತೋರಿಸಿದರು.
ನಮ್ಮ ಧರ್ಮ ಮನುಷ್ಯನಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ದಾರಿ. ಈ ವೇದಿಕೆ ಮೇಲೆ ಶ್ರೀಗಳು ಮೂರ್ನಾಲ್ಕು ಪುಸ್ತಕ ನೀಡಿದರು. ಅವರು ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣವನ್ನು ನೋಡಿದೆ.
ಆ ಭಾಷಣದಲ್ಲಿ ಅವರು, ನಾವು ಧರ್ಮಕ್ಕೆ ಅಂಟಿಕೊಂಡಿರಬಾರದು. ಬಂಧಿಸಲ್ಪಡಬಾರದು. ಬದಲಾಗಿ ನಾವು ಬಯಸಿ ಇಚ್ಛಿಸುವ ಧರ್ಮವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ನಾನು ಅವರ ಮಾತುಗಳನ್ನು ಒಪ್ಪುತ್ತೇನೆ ಎಂದು ಹೇಳಿದರು

