ಬೆಂಗಳೂರು : ಹಾಲು, ಮೊಟ್ಟೆ, ರಾಗಿ ಗಂಜಿ, ಹಾಸ್ಟೆಲ್ ಸೇರಿದಂತೆ ಎಲ್ಲಾ ಸವಲತ್ತು ಕೊಟ್ಟರೂ ಪ್ರತಿ ವರ್ಷಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಸ್ಎಸ್ಎಲ್ಸಿಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಲು ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮಕ್ಕಳ ದಾಖಲಾತಿಯಲ್ಲಿ ಇಳಿಕೆ ಮತ್ತು ಪರೀಕ್ಷಾ ಫಲಿತಾಂಶದಲ್ಲಿ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್ ಸೂಚನೆ ನೀಡಿ ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ, ಎಸ್ಎಸ್ಎಲ್ಸಿಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು

